ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಸಚಿವರ ರಾಜೀನಾಮೆಗೆ ಪದ್ಮರಾಜ್ ಆಗ್ರಹ
ಮಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರದ ವೈಫಲ್ಯ ಕಾರಣ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ.. ಪರೀಕ್ಷೆಯ ಪಾವಿತ್ರೃ ಕಾಪಾಡುವಲ್ಲಿ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವರು ಇದರ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.
ಸುಮಾರು 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದ ಕನಸು ಹೊತ್ತು ವರ್ಷಗಟ್ಟಲೆ ಸಿದ್ಧತೆ ನಡೆಸಿರುತ್ತಾರೆ. ಪತ್ರಿಕೆ ಸೋರಿಕೆಯಿಂದ ಅವರ ಪರಿಶ್ರಮಕ್ಕೆ ಬೆಲೆ ಇಲ್ಲದಂತಾಗಿ, ಅವರು ಮಾನಸಿಕವಾಗಿ ಕುಗ್ಗಿಹೋಗಲು ಕೇಂದ್ರದ ನಿರ್ಲಕ್ಷ್ಯವೇ ನೇರ ಕಾರಣ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಸ್ವಾಯತ್ತ ಸಂಸ್ಥೆಯಾಗಿದ್ದರೂ, ಅದರ ಕಾರ್ಯವೈಖರಿಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಪದೇ ಪದೆ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವ್ಯವಸ್ಥೆಯ ಪಾವಿತ್ರ್ಯತೆಯನ್ನು ಹಾಳುಮಾಡಿದೆ.
2020ರಿಂದ ಮೂರ್ನಾಲ್ಕು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಆ ಸಂದರ್ಭ ಮುಂದೆ ಹೀಗೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮತ್ತು ತನಿಖೆ ನಡೆಸುವುದಾಗಿ ಭರವಸೆ ನೀಡಿತ್ತು. ತನಿಖೆ ಯಾವ ಹಂತಕ್ಕೆ ತಲುಪಿದೆ, ಯಾರಿಗೆ ಶಿಕ್ಷೆ ಆಗಿದೆ ಎಂಬುದನ್ನು ಕೇಂದ್ರ ಸರ್ಕಾರ ಜನತೆಗೆ ತಿಳಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಒತ್ತಾಯಿಸಿದ್ದಾರೆ.