ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿದ ಮತದಾರರು: ಸತೀಶ್ ಕುಂಪಲ
ಮಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದು, ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿದೆ.
ಈ ಫಲಿತಾಂಶಗಳನ್ನು ಅವಲೋಕಿಸಿದಾಗ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಜನಪ್ರಿಯತೆ ದೇಶದಾದ್ಯಂತ ಸುನಾಮಿಯಂತೆ ವ್ಯಕ್ತವಾಗಿರುವುದು ಗೋಚರಿಸುತ್ತದೆ. ಜನತೆಯ ಮನೋಭಾವ ಬಿಜೆಪಿ ಪರವಾಗಿ ರೂಪುಗೊಂಡಿರುವುದು ಈ ಚುನಾವಣಾ ಫಲಿತಾಂಶಗಳ ಮೂಲಕ ಸ್ಪಷ್ಟವಾಗಿದೆ. ಈ ಬಾರಿ ಫಲಿತಾಂಶಗಳು ಬಹುತೇಕ ಎಲ್ಲಾ ಎಕ್ಸಿಟ್ ಪೋಲ್ಗಳ ಅಂದಾಜುಗಳನ್ನು ಮೀರಿರುವುದು ಗಮನಾರ್ಹವಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಮತ ನೀಡಿದ ಎಲ್ಲಾ ಮತದಾರರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.