ಸರಕಾರಿ ಆಸ್ಪತ್ರೆ ಖಾಸಗೀಕರಣಕ್ಕೆ ವಿರೋಧ
ಮಂಗಳೂರು: ಸರಕಾರಿ ಆಸ್ಪತ್ರೆಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸಲು ರಾಜ್ಯ ಸರಕಾರ ಮುಂದಾಗಿರುವುದು ಅತ್ಯಂತ ಖಂಡನೀಯ ಹಾಗೂ ಜನವಿರೋಧಿ ಕ್ರಮವಾಗಿದೆ ಎಂದು ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ತಿಳಿಸಿದ್ದಾರೆ.
ಬಡವರು, ಮಧ್ಯಮ ವರ್ಗದವರು ಹಾಗೂ ಗ್ರಾಮೀಣ ಭಾಗದ ಜನರು ಹೆಚ್ಚಿನ ಪ್ರಮಾಣದಲ್ಲಿ ಸರಕಾರಿ ಆಸ್ಪತ್ರೆ ಗಳನ್ನೇ ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಬದಲು ಖಾಸಗೀಕರಣದ ಮೂಲಕ ಜನರ ಮೇಲಿನ ಆರ್ಥಿಕ ಭಾರವನ್ನು ಹೆಚ್ಚಿಸುವುದು ಸರಕಾರದ ವೈಫಲ್ಯವನ್ನು ತೋರಿಸುತ್ತದೆ. ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ನೀಗಿಸಿ ಉತ್ತಮ ಸೇವೆ ನೀಡಬೇಕು. ಅದನ್ನು ಬಿಟ್ಟು ಖಾಸಗಿ ಸಂಸ್ಥೆಗಳ ಕೈಗೆ ಒಪ್ಪಿಸುವುದು ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಹಿನ್ನಡೆ ಯಾಗಲಿದೆ. ಆರೋಗ್ಯ ಸೇವೆ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಅದನ್ನು ವ್ಯಾಪಾರೀಕರಣ ಗೊಳಿಸುವ ಯತ್ನವನ್ನು ಎಸ್ಡಿಪಿಐ ವಿರೋಧಿಸುತ್ತದೆ. ಹಾಗಾಗಿ ಸರಕಾರ ತಕ್ಷಣ ಖಾಸಗೀಕರಣದ ನಿರ್ಧಾರವನ್ನು ಹಿಂಪಡೆದು ಸರ್ಕಾರಿ ಆಸ್ಪತ್ರೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಆಗ್ರಹಿಸಿದ್ದಾರೆ.