ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚೊಚ್ಚಲ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚೊಚ್ಚಲ ಹಿರಿಯ ವಿದ್ಯಾರ್ಥಿಗಳ ಸಮಾವೇಶ


ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯು ಕೇವಲ ಶಿಕ್ಷಣ ನೀಡುವುದಲ್ಲ, ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಶಿಸ್ತು, ರಾಷ್ಟ್ರೀಯತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುತ್ತಿದೆ. ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಒಂದೇ ಕುಟುಂಬದಂತೆ ಬೆರೆತು ಬದುಕುವುದು ಭಾರತದ ಏಕತೆಯ ಸಂಕೇತವಾಗಿದೆ. ಆಳ್ವಾಸ್ ಭಾರತೀಯ ಸಂವಿಧಾನದ ಮೌಲ್ಯಗಳನ್ನು ಅನುಸರಿಸಿ ವಿದ್ಯಾರ್ಥಿಗಳಲ್ಲಿ ಉತ್ತಮ ನಾಗರಿಕತ್ವವನ್ನು ಬೆಳೆಸುವ ಆದರ್ಶ ಶಿಕ್ಷಣ ಸಂಸ್ಥೆ ಎಂದು ಮಂಗಳೂರು ವಿವಿಯ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಚೊಚ್ಚಲ ಹಿರಿಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು. 

ಕಟೀಲು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಬಾಲಕೃಷ್ಣ ಶೆಟ್ಟಿ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಕಲ್ಪವೃಕ್ಷದ ಕೊಂಬೆಗಳಂತೆ. ಹಿರಿಯ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯೊಂದಿಗೆ ಸದಾ ಭಾವನಾತ್ಮಕ ಬಾಂಧವ್ಯ ಹೊಂದಿರಬೇಕು. ಮೋಹನ ಆಳ್ವ ಲಾಭದ ಹಿಂದೆ ಹೋಗದೇ, ಮೌಲ್ಯಗಳ ಹಿಂದೆ ನಡೆದವರು. ಈ ಸಂಸ್ಥೆ ಕೇವಲ ಯಾಂತ್ರಿಕವಾಗಿ ನಿರ್ಮಾಣವಾಗಿಲ್ಲ; ಮನುಷ್ಯತ್ವದ ಅಡಿಪಾಯದಲ್ಲಿ ನಿರ್ಮಿಸಲಾಗಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ.ಮೋಹನಆಳ್ವ ಮಾತನಾಡಿ, 2008ರಲ್ಲಿ ಆರಂಭವಾದ ಇಂಜಿನಿಯರಿಂಗ್ ಕಾಲೇಜು ಇಂದು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದು, ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಯುವಕರು ತಾಂತ್ರಿಕ ಜ್ಞಾನವನ್ನು ಪಡೆದು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು. ಆರಂಭದಲ್ಲೇ ಮೆಡಿಕಲ್ ಕಾಲೇಜು ಆರಂಭಿಸದೆ ಮೂಲಭೂತ ಶಿಕ್ಷಣಕ್ಕೆ ಆದ್ಯತೆ ನೀಡಿದ ನಿರ್ಧಾರವೇ ಆಳ್ವಾಸ್ ಸಂಸ್ಥೆಯ ಇಂದಿನ ಯಶಸ್ಸಿಗೆ ಕಾರಣವಾಗಿದೆ ಎಂದರು.

ಹಿರಿಯ ವಿದ್ಯಾರ್ಥಿಗಳ ಸಂಘದ ರಚಿಸಿ, ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಂಶುಪಾಲ ಪೀಟರ್ ಫೆನಾಂಡೀಸ್, ಕಾಲೇಜಿನ ಮಾಜಿ ಪ್ರಾಂಶುಪಾಲ ಗೋವಿಂದ ಗೌಡ ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ವಾಸುದೇವ್ ಶಹಪುರ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article