ಮಜಿ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ
Saturday, June 13, 2026
ಬಂಟ್ವಾಳ: ಬಾಲಕಾರ್ಮಿಕ ಪದ್ಧತಿಯು ಸಮಾಜವನ್ನು ಅನಿಷ್ಠವಾಗಿ ಕಾಡುತ್ತಿದೆ ಅದರ ಬಗ್ಗೆ ಪ್ರತಿಯೊಬ್ಬನಿಗೂ ಅರಿವನ್ನು ಮೂಡಿಸುವುದು ಹಾಗೂ ತಿಳುವಳಿಕೆ ಹೊಂದುವಂತೆ ಮಾಡುವುದು ಬಹು ಮುಖ್ಯವಾಗಿದೆ. ಮಕ್ಕಳನ್ನು ದುಡಿಮೆಗೆ ತಳ್ಳುವ ಬದಲು ಅವರಿಗೆ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಮನೆಗಳಲ್ಲಿ, ಕಾರ್ಖಾನೆ, ಅಂಗಡಿ ಅಥವಾ ಇನ್ನಾವುದೇ ಸ್ಥಳಗಳಲ್ಲಿ ಬಾಲಕಾರ್ಮಿಕರು ಕಂಡುಬಂದಲ್ಲಿ ಅವರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಲು ನಾವೆಲ್ಲರೂ ಶ್ರಮಿಸಬೇಕು ಎಂದು ಶಿಕ್ಷಕ ತೌಸೀಫ್ ಅಹ್ಮದ್ ಹೇಳಿದರು.
ಶುಕ್ರವಾರ ವೀರಕಂಭ ಗ್ರಾಮದ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕ ವಿರೋಧಿ ವಿಷಯದ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೇಸ್ ಮಂಡೋನ್ಸ ಹಾಗೂ ಶಿಕ್ಷಕ ವೃಂದ, ಶಾಲಾ ನಾಯಕ ಮೊಹಮ್ಮದ್ ಹಾರೂನ್ ಫರ್ಹಾನ್, ಶಾಲಾ ಮಂತ್ರಿಮಂಡಲದ ಸದಸ್ಯರು, ಶಾಲಾ ವಿವಿಧ ಸಂಘಗಳ ವಿದ್ಯಾರ್ಥಿಗಳು ಹಾಜರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ಸ್ವಾಗತಿಸಿ, ಶಿಕ್ಷಕಿ ಸಂಪ್ರಿಯ ವಂದಿಸಿದರು. ಹಿರಿಯ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.