ಜೂ.4ರಿಂದ ಮುಂಗಾರು ಆರಂಭ: ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸಿದ್ಧತೆ: ದರ್ಶನ್ ಎಚ್.ವಿ.
ಪಡೀಲ್ನ ಪ್ರಜಾಸೌಧದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದ.ಕ. ಜಿಲ್ಲೆಯಲ್ಲಿ ಒಟ್ಟು 115 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ತಹಶೀಲ್ದಾರ್ ಹಂತದಲ್ಲಿ ವಿವಿಧ ತಾಲೂಕುಗಳಲ್ಲಿ ತುರ್ತು ಪರಿಹಾರ ಕ್ರಮಗಳಿಗಾಗಿ ಒಟ್ಟು ಜಿಲ್ಲೆಯಲ್ಲಿ 3.25 ಕೋಟಿ ರೂ. ಲಭ್ಯ ಇದ್ದು, ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದರು.
ಮುಂಗಾರು ಸಂದರ್ಭ ರಾತ್ರಿ ವೇಳೆ ಪ್ರಾಕೃತಿಕ ವಿಕೋಪಗಳಾದ ಸಂದರ್ಭ ಅಧಿಕಾರಿಗಳು ದೂರವಾಣಿ ಕರೆ ಎತ್ತುವುದಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ 24*7 ಮೊಬೈಲ್ ಕರೆಗಳನ್ನು ಡೈವರ್ಚ್ ಮಾಡುವ ಸೂಚನೆಯನ್ನು ನೀಡಲಾಗಿದೆ. ಯಾರಿಗೇ ಕರೆ ಬಂದಾಗ ಯಾರಾದರೂ ಅದನ್ನು ಸ್ವೀಕರಿಸಿ ತಕ್ಷಣ ಸಂಬಂಧಪಟ್ಟವರಿಗೆ ಸಂದೇಶ ಕಳುಹಿಸುವ ರೀತಿಯ ಪ್ರಯೋಗವನ್ನು ಮಾಡಲಾಗುತ್ತಿದೆ ಎಂದವರು ತಿಳಿಸಿದರು.
ಪಾಲಿಕೆಯ 60 ವಾರ್ಡ್ಗಳಿಗೆ ಇಂಜಿನಿಯರ್ಗಳನ್ನು, 223 ಗ್ರಾ.ಪಂ. ವ್ಯಾಪ್ತಿಯಲ್ಲಿ ಪಿಡಿಒಗಳು, 13 ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ಗಳಾಗಿ ನೇಮಕ ಮಾಡಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ಇನ್ಸಿಡೆಂಟ್ ಕಂಮಾಂರ್ಗಳು ಜಾಗೃತರಾಗಿದ್ದು, ಸಾರ್ವಜನಿಕ ದೂರಗಳಿಗೆ ಸ್ಪಂದಿಸುವುದು, ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಳಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶನ ನೀಡಲಾಗಿದೆ ಎಂದವರು ಹೇಳಿದರು.
25 ಸಿಬ್ಬಂದಿಗಳ ಎನ್ಡಿಆರ್ಎಫ್ ತಂಡ ಪುತ್ತೂರು ತಾಲೂಕಿನಲ್ಲಿ ನಿಯೋಜಿಸಲಾಗಿದ್ದು, 10 ಸಿಬ್ಬಂದಿಯ ಎನ್ಡಿಆರ್ಎಫ್ ತಂಡವನ್ನು ಸುಬ್ರಹ್ಮಣ್ಯದಲ್ಲಿ ನಿಯೋಜಿಸಲಾಗಿದೆ. ತುರ್ತು ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು 28 ಬೋಟ್ ಕಟ್ಟರ್, ಲೈಫ್ ಜಾಕೆಟ್, ಜೀವ ರಕ್ಷಕರು, ಜೆಸಿಬಿ ಯಂತ್ರ, ಟಿಪ್ಪರ್, ಕ್ರೇನ್ಗಳನ್ನು ಸಿದ್ಧಗೊಳಿಸಲಾಗಿದೆ. ಸಂಭಾವ್ಯ ಪ್ರವಾಹ ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಪ್ರಕೃತಿಕ ವಿಕೋಪಗಳು ಸಂಭವಿಸಿದಾಗ ತುರ್ತು ರಕ್ಷಣಾ ಕಾರ್ಯಾಚರಣಎಗಾಗಿ ಸರ್ವ ಸನ್ನಧವಾಗಿರಬೇಕಾಗಿರುವ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ಅಗತ್ಯ ಸಿಬ್ಬಂದಿ ಹಗಾಊ ಯಂತ್ರೋಪಕರಣಗಳನ್ನು ವಿವಿಧ ಇಲಾಖೆಯವರು ಸನ್ನದ್ಧವಾಗಿಡಲು ಸೂಚಿಸಲಾಗಿದೆ. ಜೂ.1 ರಿಂದ 2 ತಿಂಗಳ ಕಾಲ ಮೀನುಗಾರಿಕೆ ನಿಷೇಧವಿರಲಿದೆ. ಜಿಲ್ಲೆಯ ಎಲ್ಲಾ ಕಿಂಡಿ ಅಣೆಕಟ್ಟುಗಳ ಗೇಟ್ಗಳಲ್ಲಿ ಮರದ ದಿಮ್ಮಿ, ಹಾಗೂ ಇತರ ತ್ಯಾಜ್ಯ ಸಂಗ್ರಹವಾಗದಂತೆ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕ್ರಮ ವಹಿಸಲು ನಿರ್ದೇಶನ ನೀಡಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ಮಳೆಗಾಲದಲ್ಲಿ ಗುಡ್ಡ ಪ್ರದೇಶದ ಚಾರಕಣಕ್ಕೆ, ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡುವ ಜತೆಗೆ ಎಲ್ಲಾ ರೀತಿಯ ಅಗತ್ಯ ಸುರಕ್ಷಾ ಕ್ರಮಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಸಿಇಒ ವಿನಾಯಕ ಕರ್ಭಾರಿ, ಅಪರ ಜಿಲ್ಲಾಧಿಕಾರಿ ರಾಜು ಉಪಸ್ಥಿತರಿದ್ದರು.
ಮಳೆಗಾಲದಲ್ಲಿ ಜಲಸಿರಿ, ಒಳಚರಂಡಿ ಹೊಸತಾಗಿ ಅಗೆತಕ್ಕೆ ಅವಕಾಶವಿಲ್ಲ:
ಜಲಸಿರಿ ಅಥವಾ ಒಳಚರಂಡಿಗೆ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿಯ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಮುಂದಿನ ಎರಡೂವರೆ ತಿಂಗಳ ಅವಧಿಯಲ್ಲಿ ಯಾವುದೇ ಹೊಸತಾಗಿ ಗುಂಡಿ ಅಗೆಯುವುದು ಅಥವಾ ರಸ್ತೆ ಅಗೆತ ಕಾರ್ಯಕ್ಕೆ ಅವಕಾಶ ಇರುವುದಿಲ್ಲ. ದ.ಕ. ಜಿಲ್ಲೆಯಲ್ಲಿ ಒಟ್ಟು 92 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಬೆಳ್ತಂಗಡಿಯಲ್ಲಿ ಗರಿಷ್ಟ 32 ಹಾಗೂ ಉಳ್ಳಾಲದಲ್ಲಿ ಕನಿಷ್ಟ೩ ಸಂಭವನೀಯ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ. 88 ಕಡೆ ಸಂಭವನೀಯ ಭೂಕುಸಿತ ಪ್ರದೇಶವೆಂದು ಗುರುತಿಸಲಾಗಿದೆ. ಇದು ಕೂಡಾ ಬೆಳ್ತಂಗಡಿಯಲ್ಲಿ ಗರಿಷ್ಠ 35 ಹಾಗೂ ಪುತ್ತೂರಿನಲ್ಲಿ ಕನಿಷ್ಟ 3 ಕಡೆ ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
91 ಶಾಲೆ, 137ಅಂಗನವಾಡಿಗಳ ದುರಸ್ತಿಗೆ ಅನುಮೋದನೆ:
ಶಾಲೆ ಮತ್ತು ಅಂಗನವಾಡಿ ದುರಸ್ತಿ ಕಾರ್ಯ ಅನುದಾನದ ಕೊರತೆ ಹಾಗೂ ಇತರ ಕಾರಣಗಳಿಂದ ತುರ್ತಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ 91 ಶಾಲೆಗಳು, 137 ಅಂಗನವಾಡಿಗಳ ದುರಸ್ತಿಗೆ ಅನುಮೋದನೆ ನೀಡಲಾಗಿದೆ. ಅಂಗನವಾಡಿಗಳಿಗೆ 2.5 ಕೋಟಿ ರೂ. ಹಾಗೂ ಶಾಲೆಗಳನ್ನು 1.5 ಕೋಟಿ ರೂ. ವೆಚ್ಚದಲ್ಲಿ ತುರ್ತಾಗಿ ದುರಸ್ತಿಗ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಈ ಬಾರಿ ಮಳೆಗಾಲದಲ್ಲಿ ಯಾವುದೇ ಶಾಲೆ, ಅಂಗನವಾಡಿ, ಆಸ್ಪತ್ರೆಗಳು ದುರಸ್ತಿ ಅಗತ್ಯವಿದ್ದಲ್ಲಿ ಮುಂದಿನ ದಿನಗಳಲ್ಲಿ ಅದಕ್ಕೂ ಅನುದಾನ ಒದಗಿಸಲಾಗುವುದು. ತುಂಬಾ ಪ್ರಮಾಣದ ದುರಸ್ತಿ ಇರುವ ಸಂಸ್ಥೆಗಳಲ್ಲಿ ಮಕ್ಕಳನ್ನಾಗಲಿ, ಸಾರ್ವಜನಿಕರನ್ನಾಗಲಿ ಇರದಂತೆ, ಅಂತಹ ಕಟ್ಟಡಗಳನ್ನು ಉಪಯೋಗಿಸದಂತೆ ಎಲ್ಲಾ ತಾಲೂಕಿನ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಾತ್ರವಲ್ಲದೆ, ಸಂಬಂಧಪಟ್ಟಇಲಾಖೆಗಳು ಅಂತಹ ದುಸ್ಥಿತಿಯಲ್ಲಿರುವ ಕುಸಿಯುವ ಭೀತಿಯಲ್ಲಿರುವ ಕಟ್ಟಡಗಳನ್ನು ಪತ್ತೆಹಚ್ಚಿ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.