ಜೂ.9 ರಂದು ಬೂಕರ್ ದೀಪಾ ಭಾಸ್ತಿ ಉಪನ್ಯಾಸ
ಮಂಗಳೂರು: ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜೂ.9 ರಂದು ಬೆಳಗ್ಗೆ 10.30ಕ್ಕೆ ಪಿ.ಪಿ.ಗೋಮತಿ ಸ್ಮಾರಕ ವಾರ್ಷಿಕ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬರಹಗಾರ್ತಿ ಮತ್ತು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಾಸ್ತಿ ಉಪನ್ಯಾಸ ನೀಡಲಿದ್ದಾರೆ ಎಂದು ವಿವಿ ಕುಲಪತಿ ಪೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿ.ಪಿ.ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ‘ ಚಿಂತನೆಯೇ ಭಿನ್ನಮತವಾದಾಗ: ಭಾಷೆ ಮತ್ತು ಜಗತ್ತಿನ ಕುರಿತು ಕೆಲವು ಆಲೋಚನೆಗಳು‘ ಎಂಬ ವಿಷಯದ ಕುರಿತು ದೀಪಾ ಭಾಸ್ತಿ ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಓದು ಮತ್ತು ಬರವಣಿಗೆಯ ಆಸಕ್ತಿ ಹಾಗೂ ಜೀವ ಪರವಾದ ಬರಹದ ವಸ್ತುವನ್ನು ಕಂಡುಕೊಳ್ಳುವ ದೃಷ್ಟಿಕೋನವನ್ನು ಉತ್ತೇಜಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಅವರು ತಿಳಿಸಿದರು.
ಟ್ರಸ್ಟ್ ನ ಪ್ರಮುಖರಾದ ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಮುಖರಾದ ಬಂಬೀನ ಚಿನ್ನಮ್ಮ, ಡಾ. ಧನಂಜಯ ಕುಂಬ್ಳೆ, ಕಲ್ಲೂರು ನಾಗೇಶ್ ಉಪಸ್ಥಿತರಿದ್ದರು.