ಶಾಸಕ ಕಾಮತ್ ನೇತೃತ್ವದಲ್ಲಿ ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಲವಾರು ಕಾಮಗಾರಿಗಳ ಉದ್ಘಾಟನೆ
Tuesday, June 9, 2026
ಮಂಗಳೂರು: ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್ಪಿಎಲ್ ಸಿಎಸ್ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಉದ್ಘಾಟನಾ ಸಮಾರಂಭವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
ಬಳಿಕ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸ್ವಚ್ಛತೆಯ ದೃಷ್ಟಿಯಿಂದ ಇಂತಹ ಮೂಲಭೂತ ಸೌಕರ್ಯಗಳು ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ನಮ್ಮ ಮನವಿಗೆ ಸ್ಪಂದಿಸಿ ಎಂಆರ್ಪಿಎಲ್ ನೀಡುತ್ತಿರುವ ಸಹಕಾರ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ಕೆ ಜೊತೆಯಾಗೋಣ ಎಂದು ಹೇಳಿದರು.
ಎಂಆರ್ಪಿಎಲ್ ಸಂಸ್ಥೆಯ ಸಿಎಸ್ಆರ್ ವಿಭಾಗದ ವ್ಯವಸ್ಥಾಪಕ ಹರೀಶ್ ರಾವ್ ಮಾತನಾಡಿ, ಸಂಸ್ಥೆಯು ಸಮುದಾಯದ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಆರೋಗ್ಯ-ಸ್ವಚ್ಛತೆ ಸುಧಾರಣೆಗೆ ಬದ್ಧವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಜಯಾನಂದ ಎನ್. ಸುವರ್ಣ ಮಾತನಾಡಿ, ಅತ್ಯಾಧುನಿಕ ಶೌಚಾಲಯಗಳು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಿದ ಎಂಆರ್ಪಿಎಲ್ ಸಂಸ್ಥೆಗೆ ಹಾಗೂ ಅದಕ್ಕೆ ವಿಶೇಷ ಪ್ರಯತ್ನ ಮಾಡಿದ ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.
ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ವನಿತಾ ಪ್ರಸಾದ್, ಶಕೀಲಾ ಕಾವಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯೆ ಶಾರದಾ, ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್, ಸಿಬಿಸಿ ಸದಸ್ಯ ಅಶೋಕ್ ನಾಯ್ಕ್, ಎಸ್ಡಿಎಂಸಿ ಅಧ್ಯಕ್ಷ ಕಿಶೋರ್, ಉದ್ಯಮಿಗಳಾದ ವಿಜಯ ಶೆಣೈ, ಪ್ರಸಾದ್, ಹಿರಿಯ ಶಿಕ್ಷಕಿ ದಾಕ್ಷಾಯಿಣಿ, ಉಪನ್ಯಾಸಕಿ ಸರಳಾದೇವಿ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜಿನ ಹಿರಿಯ ಉಪನ್ಯಾಸಕಿ ಸರಳಾದೇವಿ ಪಿ. ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಶಾಂತ್ ಕುಮಾರ್ ವಂದಿಸಿದರು.


