ಚರಂಡಿಗೆ ಬಿದ್ದ ಕಾರಿನಲ್ಲಿ ಮದ್ಯ ಪತ್ತೆ..
ಮಂಜೇಶ್ವರ: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಸೋಮವಾರ ರಾತ್ರಿ ಉಪ್ಪಳ ಗೇಟ್ ಬಳಿ ನಡೆದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ಮದ್ಯ ಹಾಗೂ ಕಾರನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಕೊಮ್ಮಂಗಳ ಚಾರ್ಲ ನಿವಾಸಿ ಪ್ರಜ್ವಲ್ (25) ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ಘಟನೆ ಸಂಭವಿಸಿದೆ. ಸರ್ವೀಸ್ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು, ಸ್ಥಳೀಯ ನಾಗರಿಕರು ಕಾರಿನೊಳಗಿದ್ದ ಚಾಲಕನನ್ನು ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.
ನಾಗರಿಕರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ತಲುಪಿದ ಪೊಲೀಸರು ಕಾರನ್ನು ತಪಾಸಣೆ ನಡೆಸಿದ ವೇಳೆ ಕಾರಿನೊಳಗೆ ಭಾರೀ ಪ್ರಮಾಣದ ಮದ್ಯ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, 39 ಬಾಕ್ಸ್ಗಳಲ್ಲಿ ಮಂಗಳೂರಿನಿಂದ ಕಾಸರಗೋಡು ಕಡೆಗೆ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕಳವಿಗೆ ಯತ್ನ..
ವರ್ಕಾಡಿ ಮಜೀರ್ಪಳ್ಳ ಎಂಬಲ್ಲಿ ಜ್ಯುವೆಲ್ಲರಿಗೆ ನುಗ್ಗಿದ ಕಳ್ಳರು ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್ ಮತ್ತು ಶಹೀರ್ ಮಾಲಕತ್ವದ ಜ್ಯುವೆಲ್ಲರಿಯ ಶಟರ್ ಮುರಿಯಲಾಗಿದ್ದು, ಚಿನ್ನಾಭರಣ ಹಾಗೂ ಇತರ ವಸ್ತುಗಳು ಕಳವಾದ ಬಗ್ಗೆ ವರದಿಯಾಗಿಲ್ಲ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.