ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ  ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ.  ಅನಧಿಕೃತವಾಗಿ ಬೀಜ,ರಸಗೊಬ್ಬರ  ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ ಮೇರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ 1966 ಉಲ್ಲಂಘಿಸಿ ಅನುಮತಿ ಇಲ್ಲದೇ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ.ಮೌಲ್ಯದ 180 ಕೆ.ಜಿ.ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು , ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ಪುಷ್ಪಗಿರಿ ಅಗ್ರೋ ಕೇಂದ್ರದಲ್ಲಿ ಅನಧಿಕೃತವಾಗಿ ಸಂಗ್ರಹಿಸಿದ್ದ ಸುಮಾರು 12 ಸಾವಿರ ರೂ.ಮೌಲ್ಯದ 30 ಕೆ.ಜಿ.ಹೈಬ್ರಿಡ್ ಮೆಕ್ಕೆಜೋಳ ಹಾಗೂ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಮದಿಹಳ್ಳಿಯ ಶ್ರೀ ವೆಂಕಟೇಶ್ವರ ಟ್ರೇಡರ್ಸ್‌ನಲ್ಲಿ ಕಾನೂನು ಉಲ್ಲಂಘಿಸಿ ದಾಸ್ತಾನು ಮಾಡಲಾಗಿದ್ದ ಸುಮಾರು 1.77 ಲಕ್ಷ ಮೌಲ್ಯದ 88 ಚೀಲ ಯೂರಿಯಾ,ಪಾಸ್ಫೋ ಜಿಪ್ಸಮ್ ಗ್ರ್ಯಾನ್ಯುಲ್ಸ್  ವಶಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 86 ಸಾವಿರ ರೂ.ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಡ್ಯ ತಾಲ್ಲೂಕಿನ ಇಂದುವಾಳದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 300 ಚೀಲ ಎನ್.ಎಫ್.ಎಲ್. ಯೂರಿಯಾವನ್ನು ಮಂಡ್ಯದ ಕೃಷಿ ಅಧಿಕಾರಿಗಳು ಜುಲೈ 4 ರಾತ್ರಿ ವಶಪಡಿಸಿಕೊಂಡಿದ್ದಾರೆ.

ಬೀಜ, ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡು ಬಂದರೆ ಕೃಷಿ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article