ಕುಂದಾಪುರ ನಗರ ಚರ್ಚ್ ಬಳಿ ವ್ಯಕ್ತಿ ಹತ್ಯೆ: ವ್ಯವಹಾರ ವೈಷಮ್ಯ ಕಾರಣದ ಶಂಕೆ
ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಕೊಲೆಯಾದವರು ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಹಣಕಾಸು ಮತ್ತಿತರ ವ್ಯವಹಾರಗಳನ್ನು ಮಾಡಿಕೊಂಡಿದ್ದ ಐವನ್ ರಿಚರ್ಡ್ ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಅಪರಿಚಿತನ ಗುಂಡಿಗೆ ಬಲಿಯಾಗಿದ್ದಾರೆ. ಹಂತಕ ಪಿಸ್ತೂಲ್ ನಿಂದ ಆರೋಪಿ ಐವನ್ ಅವರಿಗೆ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು, ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರ್ಯಾವುದೇ ವ್ಯವಹಾರ ಸಂಬಂಧಪಟ್ಟ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ಅಂದಾಜಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಭೇಟಿ ನೀಡಿದ್ದಾರೆ. ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆದಿದೆ.