ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ


ಮಂಗಳೂರು: ಕೇಂದ್ರ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ಬರುವ ಮೈ ಭಾರತ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ   ನೋಂದಣಿಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲು ಜಿಲ್ಲಾಧಿಕಾರಿ ದರ್ಶನ ಹೆಚ್.ವಿ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮೈ ಭಾರತ್ನಲ್ಲಿ ಇದುವರೆಗೆ 42,778 ಮಂದಿ  ಹಾಗೂ 156 ಯೂತ್ ಕ್ಲಬ್ಗಳು ನೋಂದಣಿಯಾಗಿವೆ. ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಬೇಕು. ವಿಶೇಷವಾಗಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಭಿಯಾನ ನಡೆಸಿ  ವಿದ್ಯಾರ್ಥಿಗಳನ್ನು ನೋಂದಾಯಿಸಬೇಕು. ಈ ಬಗ್ಗೆ ಈ ತಿಂಗಳೊಳಗೆ  ಕಾರ್ಯಪ್ರವೃತ್ತರಾಗಿ  ವರದಿ ಕೊಡುವಂತೆ  ಅವರು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ರಾಜು ಕೆ ಮಾತನಾಡಿ, ಮೈ ಭಾರತ್  ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲೆಯ ವಿದ್ಯಾರ್ಥಿಗಳು ಮತ್ತು ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಗಮನಹರಿಸಬೇಕು. ವಿವಿಧ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಅಂತರ್ರಾಜ್ಯ ವಿನಿಮಯ ಕಾರ್ಯಕ್ರಮಗಳಿಗೆ ಹೆಚ್ಚು ಪ್ರಚಾರ ನೀಡಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಮೈ ಭಾರತ್ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ ಮಾತನಾಡಿ, ಪ್ರಸಕ್ತ ವರ್ಷ ಮೈ ಭಾರತ್ ವತಿಯಿಂದ ವಿವಿಧ ಕಾರ್ಯಕ್ರಮ ನಡೆಸಲು  ಕ್ರಿಯಾಯೋಜನೆ ತಯಾರಿಸಲಾಗಿದೆ. ಅದರಂತೆ ವಿಕಸಿತ ಭಾರತ ಪಾದಯಾತ್ರೆ, ನಶಮುಕ್ತ ಭಾರತ ಅಭಿಯಾನ, ನಾಯಕತ್ವ ಶಿಬಿರಗಳು, ಜಾಗೃತಿ ಕಾರ್ಯಕ್ರಮಗಳು, ಮಹತ್ವದ ಸರ್ಕಾರ ಯೋಜನೆಗಳ ಬಗ್ಗೆ  ವಿಚಾರ ಸಂಕಿರಣ,  ಕ್ರೀಡಾ ಪರಿಕರ  ವಿತರಣೆ, ಸ್ವಚ್ಛತಾ ಅಭಿಯಾನ,  ಸ್ವ ಉದ್ಯೋಗ ತರಬೇತಿ, ಯೂತ್ ಪಾರ್ಲಿಮೆಂಟ್   ಮತ್ತಿತರ ಕಾರ್ಯಕ್ರಮಗಳನ್ನು  ಆಯೋಜಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ  ಜಯರಾಮ್,   ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಪ್ರದೀಪ್ ಡಿಸೋಜಾ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಶ ಮುಕ್ತ ಭಾರತ ಅಭಿಯಾನದ ಪೊಸ್ಟರನ್ನು  ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article