ರಸ್ತೆ ಅಪಘಾತದಲ್ಲಿ ನಗದು ರಹಿತ, ತುರ್ತು ಚಿಕಿತ್ಸೆ ನೀಡುವ ಪಿಎಂ ರಾಹತ್ಗೆ ದ.ಕ.ಜಿಲ್ಲೆ ಮಾದರಿಯಾಗಲಿ: ಸಂಸದ ಬ್ರಿಜೇಶ್ ಚೌಟ ಸೂಚನೆ
ದ.ಕ. ಜಿಲ್ಲಾ ಆರೋಗ್ಯಾಧಿಕಾರಿಗಳ ಸಹಿತ ಸಂಬಂಧಪಟ್ಟ ಇಲಾಖೆಗಳ ಜತೆಗೆ ಶನಿವಾರ ಮಹತ್ವದ ಸಭೆ ನಡೆಸಿದ ಸಂಸದರು ಪಿಎಂ ರಾಹತ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾ ಗಿಸಲು ಕರೆ ನೀಡಿದರಲ್ಲದೆ ಯೋಜನೆ ಕಡ್ಡಾಯವಾಗಿ ಅನುಷ್ಠಾನಗೊಳಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಸಂಸದರು ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಅವರ ಪ್ರಾಣ ರಕ್ಷಿಸುವಲ್ಲಿ ಪಿಎಂ ರಾಹತ್ ಅತ್ಯಂತ ಅವಶ್ಯಕ ಯೋಜನೆಯಾಗಿದೆ. ಒಂದುವೇಳೆ ಆಸ್ಪತ್ರೆಗಳು ಯಾವುದೇ ಸಂತ್ರಸ್ತರನ್ನು ತುರ್ತು ಸಂದರ್ಭಗಳಲ್ಲಿ ದಾಖಲಿಸದೆ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿ ತೋರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದರು.
ಪಿಎಂ ರಾಹತ್ಯೋಜನೆಯಡಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಯಾವುದೇ ದಾಖಲೆಗಳ ತೊಡಕಿಲ್ಲದೆ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 7 ದಿನಗಳವರೆಗೆ ಗರಿಷ್ಠ 1.50 ಲಕ್ಷ ರೂ.ತನಕ ಉಚಿತ ತುರ್ತು ಚಿಕಿತ್ಸೆ ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಅಪಘಾತಕ್ಕೊಳಗಾದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸಾರ್ವಜ ನಿಕರಲ್ಲಿ ಯಾವುದೇ ಭಯ ಅಥವಾ ಹಿಂಜರಿಕೆ ಇರಬಾರದು ಎಂಬ ದೃಷ್ಟಿಯಿಂದ ಪ್ರಧಾನಿ ಈ ಅತ್ಯುತ್ತಮ ಯೋಜನೆಯನ್ನು ತಂದಿದ್ದಾರೆ. ಕೇಂದ್ರ ಸರಕಾರ 2025ರಲ್ಲೇ ಈ ಯೋಜನೆಯನ್ನು ಆರಂಭಿಸಿದ್ದರೂ ರಾಜ್ಯ ಸರಕಾರ ಫೆಬ್ರವರಿಯಲ್ಲಿ ಚಾಲನೆ ನೀಡಿದೆ. ಆದ್ದರಿಂದ ಇನ್ನಾದರೂ ಇದನ್ನು ಅತ್ಯಂತ ಕಟ್ಟುನಿಟ್ಟಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.
ಯೋಜನೆ ಸೌಲಭ್ಯ ವಿಳಂಬವಿಲ್ಲದೆ ಸಿಗಲು ಆಸ್ಪತ್ರೆಗಳಿಗೆ 'cFC?PÀ' ನಮೂದು ಕಡ್ಡಾಯಗೊಳಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾದ 24 ಗಂಟೆಗಳಲ್ಲಿ (ವಿಷಮ ಸ್ಥಿತಿಯಲ್ಲಿದ್ದರೆ ಗರಿಷ್ಠ ೪೮ ಗಂಟೆಗಳಲ್ಲಿ) ಛಿಈಅ?ಕ ಪೋರ್ಟಲ್ನಲ್ಲಿ ಮಾಹಿತಿ ನಮೂದಿಸಬೇಕು. ಆಸ್ಪತ್ರೆ ನೀಡಿದ ಮಾಹಿತಿಯನ್ನು ಪೊಲೀಸ್ ಇಲಾಖೆ ಪರಿಶೀಲಿಸಿ ಅನುಮೋದಿಸಿದ ತಕ್ಷಣ ಅದು R ಪೋರ್ಟಲ್ಗೆ ರವಾನೆಯಾಗಿ ಚಿಕಿತ್ಸಾ ವೆಚ್ಚವನ್ನು ಸ್ಟಕಾರವೇ ಭರಿಸಲಿದೆ. ನಿಗದಿತ ಅವಧಿಯಲ್ಲಿ ಮಾಹಿತಿ ದಾಖಲಿಸದಿದ್ದರೆ ಅರ್ಹ ಸಂತ್ರಸ್ತರು ಉಚಿತ ಚಿಕಿತ್ಸೆಯಿಂದ ವಂಚಿತರಾಗುವ ಸಾಧ್ಯತೆಯಿದೆ. ಹಾಗಾಗಿ ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದ್ದಾರೆ.
ಪ್ರತಿ ತಾಲೂಕಿನಲ್ಲಿರುವ ಪ್ರಮುಖ ಆಸ್ಪತ್ರೆಗಳೊಂದಿಗೆ ತಾಲೂಕು ಮಟ್ಟದಲ್ಲೂ ಸಭೆಗಳನ್ನು ನಡೆಸಿ ಯೋಜನೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಂಸದ ಬ್ರಿಜೇಶ್ ಚೌಟ ಸೂಚನೆ ನೀಡಿದ್ದಾರೆ.
ಯೋಜನೆಯಡಿ ಚಿಕಿತ್ಸೆ ಪಡೆದ ಸಂತ್ರಸ್ತರ ವ್ಯವಸ್ಥಿತ ಡೇಟಾ ನಿರ್ವಹಣೆ ಇರಬೇಕು. ಪ್ರತಿ ತಿಂಗಳು ಇದರ ಪ್ರಗತಿ ಪರಿಶೀಲನೆಗೆ ಮಾಸಿಕ ಸಭೆ ನಡೆಸಬೇಕು. ಯೋಜನೆಯ ಕುರಿತು ಆಸ್ಪತ್ರೆಗಳ ಹಂತದಲ್ಲಿ ಸಾರ್ವಜನಿಕವಾಗಿ ಜಾಗೃತಿ ಮೂಡಿಸಬೇಕು. ಸಂತ್ರಸ್ತರಿಗೆ ಯೋಜನೆಯ ಸರಿಯಾಗಿ ದೊರಕಿಸಿಕೊಡುವುದಕ್ಕೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಆಸ್ಪತ್ರೆಗಳು ಸಮನ್ವಯದಿಂದ ಕೆಲಸ ಮಾಡಬೇಕೆಂದು ಬ್ರಿಜೇಶ್ ಚೌಟ ಸಲಹೆ ನೀಡಿದ್ದಾರೆ.
ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ತಿಮ್ಮಯ್ಯ ಹಾಗೂ ಡಿಸಿಪಿ ರವಿಶಂಕರ್ ಹಾಗೂ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
