ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾ ಪ್ರಜೆಗಳ ವಿರುದ್ಧ ಕಾರ್ಯಾಚರಣೆ ವಿಹೆಚ್ಪಿ ಸ್ವಾಗತ: ಇಡೀ ಕರಾವಳಿ ಜಿಲ್ಲೆಗಳಿಗೆ ವಿಸ್ತರಿಸಲು ಆಗ್ರಹ
ಮಂಗಳೂರು: ಮಂಗಳೂರಿನ ಸುರತ್ಕಲ್ ಉರ್ವ ಮತ್ತು ವಿವಿಧ ಕಡೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ತೀವ್ರ ಕಾರ್ಯಾಚರಣೆ ನಡೆಸುವಂತೆ ಆದೇಶ ಹೊರಡಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ.
ಕರಾವಳಿ ಭಾಗದಲ್ಲಿ ಕಾನೂನುಬಾಹಿರವಾಗಿ ಬಾಂಗ್ಲಾ ಪ್ರಜೆಗಳು ನುಸುಳಿ ಕಾರ್ಯಾಚರಿಸುತ್ತಿರುವುದು ರಾಷ್ಟ್ರೀಯ ಭದ್ರತೆಗೆ ಮತ್ತು ಸ್ಥಳೀಯರ ಹಿತಾಸಕ್ತಿಗೆ ಧಕ್ಕೆ ತರುವಂತಹ ಗಂಭೀರ ಆತಂಕಕಾರಿ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೈಗೊಂಡಿರುವ ತನಿಖೆ ಮತ್ತು ಮುಂಜಾಗ್ರತಾ ಕ್ರಮಗಳು ಅತ್ಯಂತ ಶ್ಲಾಘನೀಯವಾಗಿವೆ.
ಐಜಿಪಿ ಅವರಿಗೆ ಆಗ್ರಹ:
ಅಕ್ರಮ ನುಸುಳುಕೋರರ ಜಾಲವು ಕೇವಲ ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿರದೆ, ಇಡೀ ಕರಾವಳಿ ಭಾಗದಲ್ಲಿ ಹರಡಿರುವ ಸಾಧ್ಯತೆ ದಟ್ಟವಾಗಿದೆ. ಆದ್ದರಿಂದ, ಪಶ್ಚಿಮ ವಲಯದ ಮಾನ್ಯ ಪೊಲೀಸ್ ಮಹಾನಿರೀಕ್ಷಕರು (IGP) ತಕ್ಷಣವೇ ಮಧ್ಯಪ್ರವೇಶಿಸಿ, ಇದೇ ಮಾದರಿಯ ಕಟ್ಟುನಿಟ್ಟಿನ ತಪಾಸಣೆ ಮತ್ತು ಕಾರ್ಯಾಚರಣೆಯ ಆದೇಶವನ್ನು ಇಡೀ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಸಮಗ್ರ ಕರಾವಳಿ ಜಿಲ್ಲೆಗಳ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಿಗೂ ಹೊರಡಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಈ ಮೂಲಕ ಆಗ್ರಹಪೂರ್ವಕವಾಗಿ ವಿನಂತಿಸುತ್ತದೆ.
ವಿಶ್ವ ಹಿಂದೂ ಪರಿಷತ್ತಿನ ಸಂಪೂರ್ಣ ಸಹಕಾರ:
ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡಿರುವುದು ಕಂಡುಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಅಥವಾ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪೊಲೀಸ್ ಅಧಿಕಾರಿಗಳ ಈ ಕರೆಗೆ ಪೂರಕವಾಗಿ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲು ಹಾಗೂ ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಅಡಗಿರುವ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲು ವಿಶ್ವ ಹಿಂದೂ ಪರಿಷತ್ ಸದಾ ಸಿದ್ಧವಿದೆ ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದರು.