ಭಾರೀ ಮಳೆಗೆ ಧರೆ ಕುಸಿತ: ಓರ್ವ ಮಹಿಳೆ, ಇಬ್ಬರ ಮಕ್ಕಳು ಸಾವು, ಮೂವರಿಗೆ ಗಾಯ
ಮೃತರನ್ನು ಬಿಹಾರ ಮೂಲದ ಶಾಂತ (46), ಮಕ್ಕಳಾದ ಅನಾಮಿಕ ಚೌರಾಸಿಯ (8), ಪರಿ (4) ಎಂದು ತಿಳಿದುಬಂದಿದೆ.
ಗಾಯಗೊಂಡ ಬಾಲಕೃಷ್ಣ 48), ಅಲ್ಕಾ (14) ಹಾಗೂ ಅನುಷಾ (14) ಎಂಬುವವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎನ್.ಡಿ.ಆರ್.ಎಫ್. ತಂಡವೂ ಸ್ಥಳಕ್ಕೆ ಧಾವಿಸಿದ್ದು, ಶೋಧಕಾರ್ಯ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಿರಂತರ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಭೀತಿ ಮುಂದುವರಿದಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತ್ವರಿತ ಪರಿಹಾರ ನೀಡುವಂತೆ ಹಾಗೂ ಸರ್ಕಾರದಿಂದಲೇ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಇವರು ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ ಕಳೆದ 20 ವರ್ಷಗಳಿಂದ ವಾಸ ಮಾಡುತ್ತಿದ್ದರು.