ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
Sunday, July 12, 2026
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇಲ್ಲಿನ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ಮಾತನಾಡಿ, ‘ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ಸುವರ್ಣ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಣ ಎಂದರೆ ಕೇವಲ ಪದವಿ ಪಡೆಯುವುದಲ್ಲ; ಬದಲಿಗೆ ಅದು ವ್ಯಕ್ತಿತ್ವ, ನೈತಿಕ ಮೌಲ್ಯಗಳು ಮತ್ತು ಜವಾಬ್ದಾರಿಯ ಪ್ರಜ್ಞೆಯನ್ನು ರೂಪಿಸುವುದಾಗಿದೆ. ಪ್ರತಿಯೊಂದು ತರಗತಿಯ ಅನುಭವವೂ ನಿಮ್ಮನ್ನು ಶ್ರೇಷ್ಠತೆ, ಪ್ರಾಮಾಣಿಕತೆ ಮತ್ತು ಸಮಾಜ ಸೇವೆಯತ್ತ ಕೊಂಡೊಯ್ಯುವ ಹೆಜ್ಜೆಯಾಗಲಿ ಎಂದು ಹೇಳಿದರು.
ಕಾರ್ಯಕ್ರಮದ ಎರಡನೇ ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ವಿನಯಚಂದ್ರ ಅವರು, ಸ್ವಯಂ ಶಿಸ್ತು, ನಿರಂತರ ಕಲಿಕೆ ಮತ್ತು ಪರಿಶ್ರಮದ ಮಹತ್ವವನ್ನು ವಿವರಿಸಿದರು. ಬದಲಾಗುತ್ತಿರುವ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಕುತೂಹಲ ಮತ್ತು ಸವಾಲುಗಳನ್ನು ಎದುರಿಸುವ ಮನೋಭಾವ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಡಾ. ಎಡ್ವಿನ್ ಡಿಸೋಜ ಉಪಸ್ಥಿತರಿದ್ದರು. ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿ, ಶೈಕ್ಷಣಿಕ ವರ್ಷವನ್ನು ಸ್ಪಷ್ಟ ಗುರಿಯೊಂದಿಗೆ ಪ್ರಾರಂಭಿಸುವ ಮಹತ್ವವನ್ನು ತಿಳಿಸಿದರು. ಮತ್ತೊಬ್ಬ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸ್ಪರ್ಲ್ ಫಿಯೋನಾ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

