ರಾಜ್ಯ ಸರಕಾರದ ವೈಫಲ್ಯಗಳನ್ನು ಜನರಿಗೆ ತಿಳಿ ಹೇಳಿ: ರಾಜೇಶ್ ನಾಯ್ಕ ಉಳಿಪ್ಪಾಡಿ
ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ನಡೆದ ಬಿಜೆಪಿ ಬಂಟ್ವಾಳ ಮಂಡಲದ ವಿಸ್ತೃತ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಅಂಗವಿಕಲರ ಮಾಶಾಸನ, ವಿವಿಧ ಅನುದಾನಗಳ ಕೊರತೆ ಸಹಿತ ಸರಕಾರದ ವೈಫಲ್ಯ ಮತ್ತು ಜನ ವಿರೋಧಿ ನೀತಿಗಳನ್ನು ಜನರಿಗೆ ಮನವರಿಕೆ ಮಾಡಬೇಕಾಗಿದ್ದು,ಈ ನಿಟ್ಟಿನಲ್ಲಿ ಹೋರಾಟ ರೂಪಿಸಬೇಕಾಗಿದೆ ಎಂದು ಹೇಳಿದರು.
ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಬಂಟ್ವಾಳ ಬಿಜೆಪಿ ಶೇ.100 ಸಾಧನೆ ಮಾಡಿದೆ, ಮೊದಲ ದಿನದಿಂದಲೇ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಇದಕ್ಕೆ ಬಂಟ್ವಾಳದ ಎಲ್ಲ ಕಾರ್ಯಕರ್ತರು ಸಹಕರಿಸಿದ್ದಾರೆ ಎಂದು ಶ್ಲಾಘಿಸಿದ ಅವರು ಆ. 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕವೂ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಲೋಪ ಅಥವಾ ತಪ್ಪು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ತಿಳಿಸಿದರು.
ಪಕ್ಷದ ಬೆಳವಣಿಗೆಯ ದೃಷ್ಠಿಯಿಂದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಗ್ರಾಮ ಮಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪಕ್ಷವನ್ನು ಸಧೃಢಗೊಳಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಮಾತನಾಡಿ, ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಅಗತ್ಯ ಆಕ್ಷೇಪಣೆ ಹಾಗೂ ತಿದ್ದುಪಡಿಗಳಿಗೆ ಅವಕಾಶ ಇರುವುದರಿಂದ ಪ್ರತಿಯೊಬ್ಬ ಕಾರ್ಯಕರ್ತರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿ, ಪ್ರಸ್ತಾವನೆಗೈದು ಪ್ರಾಕೃತಿಕ ವಿಕೋಪದಂತಹ ಸಂಕಷ್ಟದ ಸಂದರ್ಭಗಳಲ್ಲಿ ಜನರ ನಡುವೆ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವ ಬದಲು ಕಾಂಗ್ರೆಸ್ ನಾಯಕರು ಪೊಟೋಶೂಟ್ ಮಾಡಿಕೊಂಡು ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಾಜಿ ಶಾಸಕರಾದ ರುಕ್ಮಯಪೂಜಾರಿ,ಪದ್ಮನಾಭ ಕೊಟ್ಟಾರಿ, ವಿಭಾಗ ಪ್ರಭಾರಿ ಭರತೇಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ, ಮಂಡಲದ ಪ್ರ.ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸೇರಿದಂತೆ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹರೀಶ್ ಶೆಟ್ಟಿ ಪಡು ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ಗೋಳ್ತಮಜಲು ಪ್ರಾರ್ಥಿಸಿದರು.