ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಕುಂದಾಪುರ: ಕುಂಭಾಶಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ಗೆ ಹಿಂಬದಿಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಗ್ರಾಮದ ಆನೆಗುಡ್ಡೆ ದೇವಸ್ಥಾನದ ಸ್ವಾಗತ ಗೋಪುರದ ಬಳಿ ಈ ದುರಂತ ನಡೆದಿತ್ತು.
ಮೃತಪಟ್ಟ ಸ್ಕೂಟರ್ ಸವಾರನನ್ನು ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ಗಣೇಶ್ (34) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿಯಂತೆ, ಸ್ಕೂಟರ್ ಸವಾರ ಕುಂದಾಪುರದಿಂದ ವಡ್ಡರ್ಸೆಗೆ ಬರುತ್ತಿದ್ದ ವೇಳೆ ಅದೇ ದಿಕ್ಕಿನಿಂದ ಆರೋಪಿ ಅರವಿಂದ್ ಎಂಬವರು ಕುಂದಾಪುರದಿಂದ ಉಡುಪಿ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ಹಿಂಬದಿಯಿಂದ ನೇರ ಢಿಕ್ಕಿ ಹೊಡೆದಿದ್ದಾರೆ.
ಢಿಕ್ಕಿಯ ರಭಸಕ್ಕೆ ಗಣೇಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆ, ಮುಖ, ಹೊಟ್ಟೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.
ತಕ್ಷಣ ಅವರನ್ನು ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಸೇರಿ ಸ್ಥಳೀಯರ ಸಹಕಾರದೊಂದಿಗೆ ಕೋಟೇಶ್ವರದ ಎನ್.ಆರ್. ಆಚಾರ್ಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆ. 4ರ ಮಂಗಳವಾರ ಮುಂಜಾನೆ ಸುಮಾರು 2 ಗಂಟೆಗೆ ಗಣೇಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.