ಆ.13 ರಂದು ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಸಮಾವೇಶ
ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ. ಬಿ. ನಾಗಣ್ಣ ಗೌಡ, ಕಾರ್ಮಿಕರ ವೇತನ ಪರಿಷ್ಕರಣೆ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ಜನಪರ ಆಡಳಿತ ನೀಡುವ ನಿರೀಕ್ಷೆಯಿಂದ ಜನರು ಸರ್ಕಾರಕ್ಕೆ ಬಹುಮತ ನೀಡಿದ್ದು, ಸರ್ಕಾರವು ಜನರ ಬದುಕಿನ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ಎಂದು ಒತ್ತಾಯಿಸಿದರು.
ಕಳೆದ ಮೂರುವರೆ ವರ್ಷಗಳಿಂದ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಿದೆ. ಆದರೆ, ಬೆಲೆ ಏರಿಕೆಗೆ ಅನುಗುಣವಾಗಿ ನೌಕರರು ಮತ್ತು ಕಾರ್ಮಿಕರ ವೇತನವನ್ನು ಪರಿಷ್ಕರಿಸುವ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.
ವೇತನ ಪರಿಷ್ಕರಣೆ ಜಾರಿಯಾಗದಿದ್ದರೆ ಮುಂದಿನ ಚುನಾವಣೆಯಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸುವಂತೆ ನೌಕರರು ಮತ್ತು ಕಾರ್ಮಿಕರಿಗೆ ಕರೆ ನೀಡುವ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ ಅವರು, ಬೆಂಗಳೂರಿನ ಸಮಾವೇಶದಲ್ಲಿ ದ.ಕ. ಜಿಲ್ಲೆಯ ಸುಮಾರು 250 ಮಂದಿ ಭಾಗವಹಿಸಲಿದ್ದಾರೆ ಎಂದರು.
ಸಮಾವೇಶದ ಮೂಲಕ ರಾಜ್ಯ ಸರ್ಕಾರಕ್ಕೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಎಚ್ಚರಿಕೆ ನೀಡಲಾಗುವುದು.
ಇದರೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ನೌಕರರ ಪ್ರಮುಖ ಬೇಡಿಕೆಗಳನ್ನೂ ಸರ್ಕಾರ ತಕ್ಷಣ ಪರಿಗಣಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಆಗ್ರಹಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯದ ವಿವಿಧ ಇಲಾಖೆಗಳ 2 ಲಕ್ಷ ಮಂದಿ ಹೊರಗುತ್ತಿಗೆದಾರರಿಗೆ ತಾವೇ ಹೊರಡಿಸಿದ ಆದೇಶ ಜಾರಿಗೆ ಕಾನೂನಾತ್ಮಕ ಯಾವುದೇ ಅಡ್ಡಿ ಇಲ್ಲ. ಕಾರ್ಮಿಕ ಇಲಾಖೆ ಹೆಚ್ಚುವರಿ ಕನಿಷ್ಠ ವೇತನದ ಮಾಹಿತಿ ಒದಗಿಸುವುದಕ್ಕೆ ಸೀಮಿತವಾಗಿದ್ದು, ಅಧಿಸೂಚನೆ ಹೊರಡಿಸುವ ಕಾರ್ಯ ಮಾಡುತ್ತಿಲ್ಲ ಎಂದು ಅವರು ಹೇಳಿದರು.
ಕರಾವಳಿ ವಿಭಾಗದ ಸಂಚಾಲಕ ಬಿ. ಕೆ. ಅಣ್ಣಪ್ಪ, ಮುಖಂಡರಾದ ಮಂಜುನಾಥ, ಕೃಷ್ಣ ಪೂಜಾರಿ, ಮಲ್ಲನಾಥ, ಯಶವಂತ್, ಡಾ. ನಾಗೇಂದ್ರ ಉಪಸ್ಥಿತರಿದ್ದರು.