ಆ.4 ರಂದು ‘ಸಹಕಾರಿ ಪಿತಾಮಹ’ ದಿ. ಮೊಳಹಳ್ಳಿ ಶಿವರಾವ್ ಆವರ 146ನೇ ಜನ್ಮ ದಿನಾಚರಣೆ
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಆಂದೋಲನದ ಮೂಲಪುರುಷ ‘ಸಹಕಾರಿ ಪಿತಾಮಹ’ ದಿ. ಮೊಳಹಳ್ಳಿ ಶಿವರಾವ್ ಆವರ 146ನೇ ಜನ್ಮ ದಿನಾಚರಣೆ ಆ.4 ರಂದು ಬೆಳಗ್ಗೆ 10.30ಕ್ಕೆ ಎಸ್ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ವಹಿಸಲಿರುವರು.
ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡ ಇವರು ಮೊಳಹಳ್ಳಿ ಶಿವರಾವ್ ಆಕರ ಗ್ರಂಥವನ್ನು ಬಿಡುಗಡೆಗೊಳಿಸಲಿರುವರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಇವರು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಎಸ್ಸಿಡಿಸಿಸಿ ಬ್ಯಾಂಕಿನ ಪ್ರಕಟಣೆ ತಿಳಿಸಿದೆ.