ಸೆ.4ರಂದು ಮಂಗಳೂರಿನಲ್ಲಿ 44ನೇ ರಾಷ್ಟ್ರಮಟ್ಟದ ಮಕ್ಕಳ ಉತ್ಸವ: ಪ್ರದೀಪ್ ಕುಮಾರ್ ಕಲ್ಕೂರ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 44 ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಈ ಮಕ್ಕಳ ಉತ್ಸವದಲ್ಲಿ ಈ ಬಾರಿ ಒಟ್ಟು 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. 12 ವೇದಿಕೆಗಳಲ್ಲಿ ಏಕಕಾಲದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ರಾತ್ರಿ 12 ಗಂಟೆಯವರೆಗೆ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಸೆ.೪ರಂದು ಬೆಳಗ್ಗೆ 9 ಗಂಟೆಗೆ ಶ್ರೀಕೃಷ್ಣ ವರ್ಣ ವೈಭವ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮಹಿಳೆಯರು ಸಾಂಪ್ರದಾಯಿಕವಾಗಿ ಹಾಡುಗಳನ್ನು ಹಾಡುತ್ತಾ ಕಡಗೋಲಿನಿಂದ ಮೊಸರು ಕಡೆದು ಬೆಣ್ಣೆ ತೆಗೆಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 12ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮಧ್ಯಾಹ್ನ 1 ಗಂಟೆಗೆ ನಂದಗೋಕುಲ ವೇದಿಕೆಯಲ್ಲಿ ಗಣ್ಯರು, ಪುಟಾಣಿ ಕೃಷ್ಣರು ಹಾಗೂ ಮಾತೆಯರ ಸಮ್ಮುಖದಲ್ಲಿ ಶ್ರೀಕೃಷ್ಣ ಜನ್ಮ ಮಹೋತ್ಸವಕ್ಕೆ ದೀಪ ಪ್ರಜ್ವಲನದ ಮೂಲಕ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ಆರು ತಿಂಗಳೊಳಗಿನ ಕಂದಮ್ಮಗಳನ್ನು ಮಹಿಳೆಯರು ಸಾಂಪ್ರದಾಯಿಕ ಶೈಲಿಯಲ್ಲಿ ತೊಟ್ಟಿಲಿಗೆ ಹಾಕಿ ಜೋಗುಳ ಹಾಡುವ ವಿಶೇಷ ಕಾರ್ಯಕ್ರಮವೂ ನಡೆಯಲಿದೆ.
ಮಧ್ಯಾಹ್ನ 12ರಿಂದ ರಾತ್ರಿ 12ರವರೆಗೆ ವಿವಿಧ ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಸ್ಥಳದಲ್ಲಿಯೇ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಲ್ಕೂರ ಪ್ರತಿಷ್ಠಾನದ ಕಚೇರಿ 0824-2492239, 9448125949, 9845083736 ಸಂಪರ್ಕಿಸಬಹುದು.
ಸಂಘಟಕರಾದ ಕದ್ರಿ ನವನೀತ ಶೆಟ್ಟಿ, ಡಾ. ಪ್ರಭಾಕರ ಜೋಶಿ, ಸುಧಾಕರ ರಾವ್ ಪೇಜಾವರ, ದಯಾನಂದ ಕಟೀಲು, ವಿಜಯಲಕ್ಷ್ಮೀ ಶೆಟ್ಟಿ, ಮಂಜುಳಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.