ಮಾಜಿ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಶಾಸಕ ಕಾಮತ್ ಸಂತಾಪ
ಮಂಗಳೂರು: ಮಾಜಿ ಶಿಕ್ಷಣ ಸಚಿವರು, ಹಿರಿಯ ಸ್ವಯಂಸೇವಕರು, ಹಿರಿಯ ಬಿಜೆಪಿ ನಾಯಕರು, ಮತ್ತು ನನ್ನ ಆತ್ಮೀಯರಾಗಿದ್ದ ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.
ತಮ್ಮ ಸರಳ ಸಜ್ಜನ ಹಾಗೂ ನೇರ ನಡೆ ನುಡಿಯ ಮೂಲಕ ಎಲ್ಲರೊಂದಿಗೂ ಅತ್ಯಂತ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದ ಅವರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಪೂರ್ಣಾವಧಿ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಆರಂಭಿಸಿ, ಶಾಸಕರಾಗಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಅವರು ತಮ್ಮ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತಂದ ಹಲವು ಸುಧಾರಣೆಗಳು ಇಂದಿಗೂ ಮಾದರಿಯಾಗಿವೆ. ರಾಜ್ಯದ ಅನೇಕ ಶಾಲೆಗಳಲ್ಲಿ ‘ವಿವೇಕ ಕೊಠಡಿಗಳ’ ಪರಿಕಲ್ಪನೆಯನ್ನು ಆರಂಭಿಸಿದ್ದು ಅವರ ಹೆಗ್ಗಳಿಕೆ. ಆ ಮೂಲಕ ನನ್ನ ಮನವಿಗೆ ಸ್ಪಂದಿಸಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅನೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ವಿವೇಕ ಕೊಠಡಿಗಳನ್ನು ನಿರ್ಮಿಸಲು ವಿಶೇಷ ಮುತುವರ್ಜಿಯಿಂದ ಸಹಕರಿಸಿದ್ದು ಎಂದಿಗೂ ನೆನಪಿನಲ್ಲಿ ಉಳಿಯುತ್ತದೆ. ಅವರ ಆತ್ಮಕ್ಕೆ ಸದ್ಗತಿ ಕರುಣಿಸಿ, ಕುಟುಂಬದವರಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾಮತ್ ಸಂತಾಪ ಸೂಚಿಸಿದ್ದಾರೆ.