ಮನಪಾ ನೂತನ ಆಯುಕ್ತರನ್ನು ಭೇಟಿಯಾದ ಕಾಂಗ್ರೆಸ್ ನಾಯಕರ ನಿಯೋಗ

ಮನಪಾ ನೂತನ ಆಯುಕ್ತರನ್ನು ಭೇಟಿಯಾದ ಕಾಂಗ್ರೆಸ್ ನಾಯಕರ ನಿಯೋಗ


ಮಂಗಳೂರು: ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಹಕರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಪೊರೇಟರ್‌ಗಳ ನಿಯೋಗವು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರನ್ನು ಭೇಟಿಯಾಗಿ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ನಗರದ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಎಲ್‌ಇಡಿ ಬೀದಿ ದೀಪಗಳ ಸಮಸ್ಯೆ, ಗ್ರಾಸ್ ಕಟಿಂಗ್, ಕಸ ವಿಲೇವಾರಿ ಸೇರಿದಂತೆ ಮಹಾನಗರ ಪಾಲಿಕೆಯ ಆಡಳಿತದಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ಆಯುಕ್ತರಿಗೆ ಮನವಿ ಮಾಡಲಾಯಿತು.

ಇತ್ತೀಚೆಗೆ ನಗರದಲ್ಲಿ ಉಂಟಾದ ನೆರೆ, ಮಳೆಹಾನಿ, ಗುಡ್ಡ ಕುಸಿತ ಹಾಗೂ ಕಂಪೌಂಡ್ ಕುಸಿತದಂತಹ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ತ್ವರಿತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದಿರುವ ಅಕ್ರಮಗಳು, ಜನರಲ್ ಫಂಡ್‌ನ ಬಳಕೆ ಹಾಗೂ ಕಾಂಗ್ರೆಸ್ ಕಾರ್ಪೊರೇಟರ್‌ಗಳಿಗೆ ಅನುದಾನ ನೀಡುವಲ್ಲಿ ನಡೆದಿರುವ ತಾರತಮ್ಯದ ಬಗ್ಗೆಯೂ ಆಯುಕ್ತರ ಗಮನಕ್ಕೆ ತರಲಾಯಿತು.

ನಿಯೋಗದ ಮನವಿಗಳನ್ನು ಆಲಿಸಿದ ಆಯುಕ್ತರು, ಸಮಸ್ಯೆಗಳ ಕುರಿತು ವಿವರಗಳನ್ನು ಪಡೆದುಕೊಂಡು, ಅಗತ್ಯ ಕ್ರಮಗಳನ್ನು ಶೀಘ್ರವಾಗಿ ಕೈಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಭರವಸೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ, ಪ್ರಕಾಶ್ ಬಿ. ಸಾಲ್ಯಾನ್, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್ ಮೊಯ್ಲಿ, ಜೆಸಿಂತಾ ವಿಜಯಾ ಆಲ್ಫ್ರೆಡ್, ಮಾಜಿ ಕಾರ್ಪೊರೇಟರ್‌ಗಳಾದ ಪ್ರವೀಣ್ ಚಂದ್ರ ಆಳ್ವಾ, ಅನಿಲ್ ಕುಮಾರ್, ಅಶೋಕ್ ಡಿ.ಕೆ., ನವೀನ್ ಡಿ’ಸೋಜಾ, ಕೇಶವ ಮರೋಳಿ, ಲ್ಯಾನ್ಸ್ಲಾಟ್ ಪಿಂಟೋ, ಜೀನತ್ ಶಮ್ಸುದ್ದೀನ್, ಶಮ್ಸುದ್ದೀನ್ ಕುದ್ರೋಳಿ, ಕವಿತಾ ವಾಸು, ಅಶ್ರಫ್ ಬಜಾಲ್, ಭಾಸ್ಕರ್ ರಾವ್, ಚೇತನ್ ಕುಮಾರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಕಾಂಗ್ರೆಸ್ ನಾಯಕರಾದ ಅಲಿಸ್ಟನ್ ಡಿಕೊನ್ನ, ಶಂಶುದ್ದೀನ್, ಅಮೃತ್ ಕದ್ರಿ, ರೂಪಾ ಚೇತನ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article