ಸಾಹಿತ್ಯ ಹೃದಯದ ಭಾಷೆಯೇ ಹೊರತು, ಬುದ್ಧಿಯದ್ದಲ್ಲ: ಡಾ. ರಾಜಲಕ್ಷ್ಮಿ ಎನ್.ಕೆ.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಭಾಷಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತ್ರಿ ಕೋಶದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಣ್ಣ ಹೆಜ್ಜೆಗಳು, ದೀರ್ಘ ಜಿಗಿತಗಳು: ಸಾಹಿತ್ಯ ಅಧ್ಯಯನದ ವ್ಯಾಪ್ತಿಯ ಅನ್ವೇಷಣೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಹಿತ್ಯಕ್ಕೆ ವಿದ್ಯಾರ್ಥಿಗಳನ್ನು ಹೊಸ ಮನುಷ್ಯನನ್ನಾಗಿಸುವ ಶಕ್ತಿ ಇದೆ. ಸಾಹಿತ್ಯ ಅಭ್ಯಾಸ ಮಾಡುವಾಗ ಬೇರೆ ಬೇರೆ ಪಾತ್ರಗಳ ಮೂಲಕ ನಮ್ಮ ಬದುಕನ್ನು ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ನಮ್ಮ ಸುತ್ತಲಿನವರೊಡನೆ ಸಹಾನುಭೂತಿ ಹೊಂದಲು ಸಾಧ್ಯವಾಗುತ್ತದೆ. ಸಾಹಿತ್ಯದ ಓದು ನಮ್ಮನ್ನು ಪ್ರಶ್ನಿಸುವಂತೆ ಮಾಡುವುದರಿಂದ ವ್ಯವಸ್ಥೆಯ ಓರೆಕೋರೆಗಳನ್ನು ಪ್ರಶ್ನಿಸುವವರಾಗುತ್ತೇವೆ. ಜೊತೆಗೆ ಸಾಹಿತ್ಯವು ನಮ್ಮನ್ನು ಕಲ್ಪನೆಗೆ ಒಡ್ಡುವುದರಿಂದ ಸೃಜನಶೀಲತೆಯನ್ನು ವೃದ್ಧಿಸುತ್ತದೆ. ಇವೆಲ್ಲವೂ ನಮ್ಮ ವ್ಯಕ್ತಿತ್ವದ ಭಾಗವಾಗುವುದರಿಂದ ಕೆಲಸ ಹುಡುಕುವ ವೇಳೆಗೆ ಆಕರ್ಷಕ ವ್ಯಕ್ತಿತ್ವವನ್ನು ಹೊಂದಿರುತ್ತೇವೆ ಎಂದು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಮಾತನಾಡಿ, ಓದುವ, ಆಲೋಚಿಸುವ ಹಾಗೂ ಪ್ರಶ್ನೆ ಮಾಡುವ ಮನೋಭಾವ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಯಾವುದೇ ಗುರಿಯನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ. ಅದೊಂದು ನಿರಂತರ ಪ್ರಕ್ರಿಯೆ. ಪಠ್ಯಕ್ರಮದ ಹೊರತಾಗಿಯೂ ಸಾಹಿತ್ಯ ಓದುವ ಅಭ್ಯಾಸ ಬೆಳೆಸಿಕೊಂಡರೆ ಬದುಕಿನಲ್ಲಿ ಪರಿಪೂರ್ಣತೆ ಕಡೆಗೆ ಸಾಗಬಹುದು. ಆ ನಿಟ್ಟಿನಲ್ಲಿ ವಿಭಿನ್ನ ದೃಷ್ಟಿಕೋನಗಳಿಂದ ಚಿಂತನೆ ನಡೆಸುವ ಅಭ್ಯಾಸ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸುಭಾಷಿಣಿ ಶ್ರೀವತ್ಸ ಪ್ರಾಸ್ತಾವಿಕವಾಗಿ ಮಾತನಾಡಿದರು.
ಐಕ್ಯುಎಸಿಯ ಐಕ್ಯುಎಸಿ ಸಂಯೋಜಕ ಡಾ. ಸಿದ್ದರಾಜು ಎಂ.ಎನ್. ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.