ಸಂತ ಆಗ್ನೆಸ್ ಕಾಲೇಜಿನಲ್ಲಿ ಅರ್ಥಪೂರ್ಣ ದತ್ತಿ ಉಪನ್ಯಾಸ: ಕನ್ನಡ ಸಾಹಿತ್ಯಕ್ಕೆ ಕ್ರೈಸ್ತರ ಕೊಡುಗೆ ಅಪಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಂತ ಆಗ್ನೆಸ್ ಕಾಲೇಜಿನ (ಸ್ವಾಯತ್ತ) ರಾಜ್ಯಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ ‘ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಕ್ರೈಸ್ತರ ಕೊಡುಗೆ’ ವಿಷಯದ ಕುರಿತು ದತ್ತಿ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭ. ಡಾ. ವೆನಿಸ್ಸಾ ಎ.ಸಿ. ಅವರು, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಸಾಹಿತ್ಯಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಮುಖ್ಯ ಸಂಪನ್ಮೂಲ ವ್ಯಕ್ತಿ ಏರೋಲಿನ್ ಡಿಸೋಜಾ ಮಾತನಾಡಿ, ಕ್ರೈಸ್ತ ಸಮುದಾಯವು ಕನ್ನಡ ನಾಡು-ನುಡಿಯ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ವಿವಿಧ ಉದಾಹರಣೆಗಳೊಂದಿಗೆ ವಿವರಿಸಿದರು.
ವಿಶೇಷ ಆಹ್ವಾನಿತ ರಾಮಚಂದ್ರ ಬೈಯಾರು ಮಾತನಾಡಿ, ಕನ್ನಡ ಸಾಹಿತ್ಯ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಎ.ಆರ್. ಡಿಸೋಜಾ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಡಾ. ಎಂ.ಪಿ. ಶ್ರೀನಾಥ ಮಾತನಾಡಿ, ಇಂತಹ ಉಪನ್ಯಾಸಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಆಸಕ್ತಿ ಹಾಗೂ ಸಾಮಾಜಿಕ ಅರಿವನ್ನು ಬೆಳೆಸುತ್ತವೆ ಎಂದು ಹೇಳಿದರು.
ಆರಂಭದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಗಾಯತ್ರಿ ಸ್ವಾಗತಿಸಿದರು. ಪುಷ್ಪರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.
ಸನತ್ ಕುಮಾರ್ ಜೈನ್, ವೆಂಕಟೇಶ್ ಗಟ್ಟಿ, ದಯಾನಂದ ಕಾವೂರು ಹಾಗೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.