ಎಸ್.ಸಿ-ಎಸ್.ಟಿ ಕುಂದು ಕೊರತೆ ಸಭೆಗೆ ತಹಶೀಲ್ದಾರ್ ನಿಲ೯ಕ್ಷ್ಯ, ಅಧಿಕಾರಿಗಳ ಗೈರು: ದಲಿತ ಸಂಘಷ೯ ಸಮಿತಿ ಆರೋಪ

ಎಸ್.ಸಿ-ಎಸ್.ಟಿ ಕುಂದು ಕೊರತೆ ಸಭೆಗೆ ತಹಶೀಲ್ದಾರ್ ನಿಲ೯ಕ್ಷ್ಯ, ಅಧಿಕಾರಿಗಳ ಗೈರು: ದಲಿತ ಸಂಘಷ೯ ಸಮಿತಿ ಆರೋಪ


ಮೂಡುಬಿದಿರೆ: ಆಗಸ್ಟ್ 18ರಂದು ಆಯೋಜಿಸಲಾಗಿದ್ದ ದಲಿತ ಕುಂದುಕೊರತೆ ಸಭೆಗೆ ಸಮಾಜ ಕಲ್ಯಾಣ ಅಧಿಕಾರಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಸಹಿತ ತಾಲೂಕು ಮಟ್ಟದ  ಇಲಾಖಾ ಅಧಿಕಾರಿಗಳು ಭಾಗವಹಿಸಿಲ್ಲ ಹಾಗೂ ದಲಿತ ಮುಖಂಡರ ವಿರೋಧವಿದ್ದರೂ ತಹಸೀಲ್ದಾರ್ ಶ್ರೀಧರ್ ಮುಂದಲಮನಿ ದಲಿತರನ್ನು ನಿಲ೯ಕ್ಷಿಸಿ ಸಭೆ ನಡೆಸಿದ್ದಾರೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ಹಾಗೂ ದಲಿತ ಹಕ್ಕುಗಳ ಸಮಿತಿ ಆರೋಪಿಸಿದೆ. 

ಅವರು ಬುಧವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸಮಿತಿಯ ಜಿಲ್ಲಾ ಸಂಚಾಲಕ ಸತೀಶ್ ಕಲ್ಲಮುಂಡ್ಕೂರು  ಈ ಕುರಿತು ಮಾಹಿತಿ ನೀಡಿದರು.

ಸಭೆಗೆ ಅಬಕಾರಿ, ಕೃಷಿ, ಅರಣ್ಯ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳನ್ನು ಹೊರತುಪಡಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ತಾಲೂಕಿನ 12 ಪಂಚಾಯತ್ ನ ಪಿಡಿಒಗಳು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಭಾಗವಹಿಸಿರಲಿಲ್ಲ ಎಂದು ಮುಖಂಡರು ಆರೋಪಿಸಿದ್ದಾರೆ.

ಅಧಿಕಾರಿಗಳು ಹಾಜರಿರದೆ ದಲಿತರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಸಮಿತಿಯ ಪದಾಧಿಕಾರಿಗಳು ವಿರೋಧ ವ್ಯಕ್ತಪಡಿಸಿದರೂ ತಹಸೀಲ್ದಾರ್ ಸಭೆಯನ್ನು ಮುಂದುವರಿಸಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅವಮಾನವಾಗಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ತಹಸೀಲ್ದಾರ್ ವಿಫಲರಾಗಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಒ ಮತ್ತು ವಿಎಗಳು ಸರಿಯಾಗಿ ಲಭ್ಯವಾಗದೆ ಸಾರ್ವಜನಿಕರ ಕೆಲಸಗಳು ಸ್ಥಗಿತಗೊಂಡಿವೆ. ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆಯಲು ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಡಿಸಿ ಮನ್ನಾ ಭೂಮಿ ಅತಿಕ್ರಮಣ, ಹಕ್ಕುಪತ್ರ ವಿತರಣೆ, ರೇಷನ್ ಕಾರ್ಡ್ ರದ್ದತಿ ಹಾಗೂ ಆಸ್ಪತ್ರೆ ಮತ್ತು ಹಾಸ್ಟೆಲ್‌ಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ದಲಿತರು ತಮ್ಮ ಹಕ್ಕುಗಳ ಬಗ್ಗೆ ಪ್ರಶ್ನಿಸಿದರೆ ಬೆದರಿಕೆ ಹಾಕುವ ಪ್ರವೃತ್ತಿ ಕಂಡುಬರುತ್ತಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ಹಿಂದೆ 2025ರ ನವೆಂಬರ್ 27ರಂದು ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಗೂ ಗೈರಾಗಿದ್ದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹಿಂದಿನ ಸಭೆಯ ಅನುಪಾಲನಾ ವರದಿಯಲ್ಲಿ ತಿಳಿಸಲಾಗಿತ್ತು. ಆದರೂ ಅಧಿಕಾರಿಗಳ ವಿರುದ್ಧ ಯಾವುದೇ ಶಿಸ್ತುಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ದಲಿತ ಹಕ್ಕುಗಳ ಸಮಿತಿಯ ಕೃಷ್ಣಪ್ಪ ಕೊಣಾಜೆ ಅವರು ಮಾತನಾಡಿ ಪ್ರತಿ ಮೂರು ತಿಂಗಳಿಗೊಮ್ಮೆ ದಲಿತರ ಕುಂದುಕೊರತೆ ಸಭೆ ನಡೆಯಬೇಕಿದ್ದರೂ ದೀರ್ಘಕಾಲ ಸಭೆ ನಡೆಸಲಾಗಿಲ್ಲ ಎಂದು  ಆರೋಪಿಸಿದರು.  ಕೇವಲ ನೋಟಿಸ್ ನೀಡಿ ಕ್ರಮ ಕೈಗೊಳ್ಳದಿರುವುದರಿಂದ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿದೆ ಎಂದು ಆರೋಪಿಸಿದ ಅವರು ಇಂತಹ ತಹಸೀಲ್ದಾರ್ ಮೂಡುಬಿದಿರೆ ಬೇಕಾಗಿಲ್ಲ ಎಂದರು.

ಸಭೆಯ ಕುರಿತು ಹಿಂದೆ ಗ್ರಾಮ ಆಡಳಿತಾಧಿಕಾರಿಗಳ ಮೂಲಕ ಮನೆಮನೆಗೆ ಮುಂಚಿತವಾಗಿ ನೋಟಿಸ್ ತಲುಪಿಸಿ ಲಿಖಿತ ಸ್ವೀಕೃತಿ ಪಡೆಯಲಾಗುತ್ತಿತ್ತು. ಆದರೆ ಈಗ ಪತ್ರಿಕೆಗಳಲ್ಲಿ ಚಿಕ್ಕದಾಗಿ ಪ್ರಕಟಿಸಿ, ವಾಟ್ಸಾಪ್ ಸಂದೇಶಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇದರಿಂದ ದಲಿತರು ಸಭೆಗೆ ಬಾರದಂತೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ಮಂಗಳವಾರ ನಡೆದ ಸಭೆಗೆ ಗೈರುಹಾಜರಾದ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವರಿಗೆ ಜಂಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ. ತಾಲೂಕು ಆಡಳಿತದ ವಿರುದ್ಧ ಅಧಿಕೃತ ದೂರು ಸಲ್ಲಿಸಲಾಗುವುದು. ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗದಿದ್ದರೆ ಎಲ್ಲ ದಲಿತ ಸಂಘಟನೆಗಳನ್ನು ಒಗ್ಗೂಡಿಸಿ ಬೆಂಗಳೂರಿನಲ್ಲಿ ತೀವ್ರ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ತಾಲೂಕು ಸಂಘಟನಾ ಸಂಚಾಲಕ ಪ್ರವೀಣ್ ಮುರಗೋಳಿ, ತಾಲೂಕು ಸಂಚಾಲಕ ಉದಯ ಮಾರ್ನಾಡ್,  ಹಾಗೂ ಸದಸ್ಯ ಚಂದ್ರಶೇಖರ್ ಜಿ.ಪಿ. ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article