ಬಲವಂತದ ಬಂದ್ ನಡೆದಿಲ್ಲ: ಎಸ್ಪಿ
Tuesday, August 25, 2026
ಪುತ್ತೂರು: ದರ್ಭೆ ಘಟನೆಗೆ ಸಂಬಂಧಿಸಿ ಸಮರ್ಪಕವಾದ ತನಿಖೆ ನಡೆಸಿಯೇ ಕಾನೂನುಕ್ರಮ ಕೈಗೊಳ್ಳಲಾಗುವುದು. ನಾವು ಎಲ್ಲರನ್ನೂ ಸಮಾನವಾಗಿ ಕಂಡಿದ್ದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಪಕ್ಕೆ ಸಂಬಂಧಿಸಿದ ಸೆಕ್ಷನ್ಗಳಿಗೆ ಅನುಗುಣವಾಗಿ ನೋಟೀಸು ನೀಡುವುದು ಅಥವಾ ಬಂಧನ ಪ್ರಕ್ರಿಯೆ ನಡೆಯುತ್ತದೆ. ಹಿಂದಿನ ಪ್ರಕರಣಗಳಲ್ಲಿಯೂ ಅದೇ ರೀತಿ ಕ್ರಮ ಅನುಸರಿಸಿದ್ದೇವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದರು.
ಪುತ್ತೂರಿನ ಡಿವೈಎಸ್ಪಿ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಪುತ್ತೂರಿಗೆ ಭೇಟಿ ನೀಡಿ ಬಂದೋಬಸ್ತು ಪರಿಶೀಲನೆ ಮಾಡಿದ್ದೇನೆ. ಕೆಲವರು ಸ್ವಯಂಪ್ರೇರಿತ ಬಂದ್ಗೆ ಕರೆ ನೀಡಿದ್ದು, ಎಲ್ಲೂ ಬಲವಂತದ ಬಂದ್ ಕಂಡುಬಂದಿಲ್ಲ. ರಜಾ ದಿನಗಳಲ್ಲಿ ಕಂಡುಬರುವ ರೀತಿಯಲ್ಲಿ ಬಂದ್ ವಾತಾವರಣ ಕಂಡುಬಂದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಈದ್ ಮಿಲಾದ್ ಹಬ್ಬದ ಪ್ರಾರ್ಥನೆ ಹಾಗೂ ಮೆರವಣಿಗೆಗಳು ಯಶಸ್ವಿಯಾಗಿ ನಡೆದಿದೆ ಎಂದು ಅವರು ತಿಳಿಸಿದರು.