ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’
Thursday, August 13, 2026
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ಕ್ರಾಸ್ ಘಟಕ ಇದರ ಆಶ್ರಯದಲ್ಲಿ ಆ.13 ರಂದು ‘ಫಿಲೋ ಆಟಿದ ಕೂಟ’ವು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ‘ತುಳುನಾಡ ಮಾಣಿಕ್ಯ’ ಅರವಿಂದ್ ಬೋಳಾರ್ ಮಾತನಾಡಿ, ಕಾಲೇಜಿನಲ್ಲಿ ಇಂತಹ ಆಚರಣೆಗಳು, ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸುತ್ತದೆ. ಈ ಸಂಸ್ಕೃತಿಯ ವಾರಸುದಾರರಾಗಿ ವಿದ್ಯಾರ್ಥಿಗಳು ಮುಂದಿನ ಪೀಳಿಗೆಗೆ ಇದನ್ನು ಕೈದಾಟಿಸುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.
ಹಾಗೆಯೇ ನಮ್ಮ ಸಂಸ್ಕೃತಿಯ ಮೂಲವೇ ನಮ್ಮ ತಂದೆ ತಾಯಿಗಳಿಗೆ ನಾವು ಕೊಡುವ ಗೌರವ. ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ಅರ್ಥ ಮಾಡಿಕೊಂಡು, ಉತ್ತಮ ನಡತೆಯ ಮೂಲಕ ವಿದ್ಯಾಭ್ಯಾಸವನ್ನು ಪಡೆದು ಉತ್ತಮ ಸ್ಥಾನಮಾನವನ್ನು ಪಡೆಯಬೇಕು ಎಂದು ತಿಳಿಸಿದ ಅವರು ಉತ್ತಮ ನಡತೆಯ ಮೂಲಕ ಮಾದರಿ ವಿದ್ಯಾರ್ಥಿಗಳು ನೀವಾಗಬೇಕು, ದುರ್ವ್ಯಸನ ಮುಕ್ತ ಸಮಾಜ ನಿರ್ಮಿಸುವಲ್ಲಿ ನಿಮ್ಮ ಪಾತ್ರ ಮಹತ್ವದ್ದು ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ನಾವು ಈ ವರ್ಷ ಮೂರನೇ ವರ್ಷದ ಆಟಿ ಕೂಟವನ್ನು ಆಚರಿಸುತ್ತಿದ್ದು, ನಮ್ಮ ಆಚರಣೆಗಳು ಮಕ್ಕಳಲ್ಲಿ ಹಾಸುಹೊಕ್ಕಾಗಿರಬೇಕು ಎನ್ನುವ ಕಲ್ಪನೆಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾ, ಸರಳ ಜೀವನದೊಂದಿಗೆ ಉನ್ನತ ಮಟ್ಟಕ್ಕೆ ಏರಬೇಕೆಂದು ಹೇಳಿದರು.
ವೇದಿಕೆಯಲ್ಲಿ ಪುತ್ತೂರು ಮಾಯಿ ದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು ಫಾ. ವಿವಿಯಾನ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಆಂಥೋನಿ ಒಲಿವೇರಾ ಹಾಗೂ ಉಪನ್ಯಾಸಕರಾದ ಭರತ್ ಕುಮಾರ್, ಗೋವಿಂದ್ ಪ್ರಕಾಶ್ ಸಿ.ಎಚ್. ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವಿಶೇಷ ಆಕರ್ಷಣೆಯಾಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಕಂಗೀಲು, ಆಟಿಕಳೆಂಜ, ಹುಲಿ ಕುಣಿತ, ತುಳುನಾಡಿನ ವೈಭವವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಆಟಿ ತಿಂಡಿಯ ಪ್ರದರ್ಶನವು ನಡೆಯಿತು.
ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕಿ ಜ್ಯೋತಿ ಸ್ವಾಗತಿಸಿದರು. ಉಪನ್ಯಾಸಕಿ ಉಷಾ ಎ. ವಂದಿಸಿ, ವಿದ್ಯಾರ್ಥಿನಿ ಧೃತಿ ರೈ ಕಾರ್ಯಕ್ರಮವನ್ನು ನಿರೂಪಿಸಿದರು.








