ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ವಂಚನೆ: ನಕಲಿ ವಿಡಿಯೋ ವಿರುದ್ಧ ದೂರು
ಸುಬ್ರಹ್ಮಣ್ಯ: ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.
ನಾಗರ ಪಂಚಮಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, 750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆಗಳನ್ನು ನೆರವೇರಿಸಿ ಪ್ರಸಾದವನ್ನು ಕಳುಹಿಸಿಕೊಡಲಾಗುವುದು ಎಂಬ ಸಂದೇಶವನ್ನು ವಿಡಿಯೋದಲ್ಲಿ ನೀಡಲಾಗಿದೆ. ಇದರಿಂದ ಭಕ್ತರು ಮೋಸ ಹೋಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದೇಶ-ವಿದೇಶಗಳಲ್ಲಿ ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹೆಸರನ್ನು ಬಳಸಿಕೊಂಡು ಈ ಹಿಂದೆ ಕೂಡ ಇಂತಹ ವಂಚನೆಗೆ ಯತ್ನಿಸಿದ ಘಟನೆಗಳು ನಡೆದಿವೆ ಎನ್ನಲಾಗಿದ್ದು, ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಕೂಡಲೇ ಕಾರ್ಯಪ್ರವೃತ್ತರಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೇವಸ್ಥಾನದ ಅಧಿಕೃತ ಸೇವೆಗಳು ಹಾಗೂ ಪ್ರಸಾದಕ್ಕೆ ಸಂಬಂಧಿಸಿದ ಹಣ ಪಾವತಿ ಮಾಡುವ ಮುನ್ನ ಭಕ್ತರು ಯಾವುದೇ ಅಪರಿಚಿತ ವ್ಯಕ್ತಿಗಳ ಸಾಮಾಜಿಕ ಜಾಲತಾಣದ ಲಿಂಕ್, ಮೊಬೈಲ್ ಸಂಖ್ಯೆ ಅಥವಾ ಖಾತೆಗೆ ಹಣ ವರ್ಗಾಯಿಸದೆ, ದೇವಸ್ಥಾನದ ಅಧಿಕೃತ ಮೂಲಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.