ಆನೆಗಳ ಹಾವಳಿಯಿಂದ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ
ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ದುಗ್ಗಲಡ್ಕ, ಕಂದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ರಾತ್ರಿ ಕೃಷಿಕರ ಜಮೀನುಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿದೆ.
ಕೃಷಿ ನಾಶದ ಜೊತೆಗೆ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಕೂಡ ನಡೆದಾಡಲು ಕಷ್ಟಕರವಾದ ಸನ್ನಿವೇಶ ನಿರ್ಮಾಣ ಮಾಡಿದೆ. ಜನರು ಆತಂಕದಲ್ಲಿ ಸಮಯ ಕಳೆಯುವಂತಾಗಿದೆ. ತಕ್ಷಣ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರ ವಿಶೇಷ ಮುತುವರ್ಜಿ ವಹಿಸಿ ಆನೆಗಳನ್ನು ಕಾಡಿಗೆ ಅಟ್ಟಲು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಕಳೆದ ಒಂದು ವಾರದಿಂದ ಸುಳ್ಯ ನಗರ ಪ್ರದೇಶವಾದ ಕುಂಬೆತ್ತಿಬನ, ದುಗ್ಗಲಡ್ಕ, ನೀರಬಿದಿರೆ, ಕಂದಡ್ಕ ಭಾಗದಲ್ಲಿ ಸುಮಾರು 6 ರಿಂದ 7 ಆನೆಗಳ ಹಿಂಡು ವಾಸ್ತವ್ಯವನ್ನು ಹೊಂದಿದ್ದು, ಶಾಲಾ ಮಕ್ಕಳು ಮತ್ತು ಸಾರ್ವಜನಿಕರ ಜೀವಕ್ಕೆ ತೊಂದರೆ ಆಗುವ ಮೊದಲು ವಿಶೇಷ ಗಮನ ಹರಿಸುವುದು ಅತ್ಯಗತ್ಯ ಪರಿಹಾರ ಘೋಷಣೆ ಮಾಡುವುದು ಮುಖ್ಯವಲ್ಲ. ಕೃಷಿ ಹಾನಿಗೂ ಮೊದಲು ಸೂಕ್ತ ಕ್ರಮಗಳನ್ನು ಕೈಗೊಂಡು ನಾಗರಿಕರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿರುವುದನ್ನು ಗಂಭೀರ ಸಮಸ್ಯೆ ಎಂದು ಪರಿಗಣಿಸಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸುತ್ತಿದ್ದೇನೆ ಎಂದು ವೆಂಕಟ್ ವಳಲಂಬೆ ತಿಳಿಸಿದ್ದಾರೆ.