ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ಪಯಣದಲ್ಲಿ ಹೊಸ ಅಧ್ಯಾಯ, ಸೆ.11 ರಂದು ಪ್ರಥಮ ಪದವೀಧರರ ‘ಪದವಿ ಪ್ರದಾನ’ ಸಮಾರಂಭ
ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಈ ಸಮಾರಂಭವು ಔಪಚಾರಿಕ ಶೈಕ್ಷಣಿಕ ಕಾರ್ಯಕ್ರಮ ಆಗಿರದೆ ಸಂಸ್ಥೆಯ ಶೈಕ್ಷಣಿಕ ಪಯಣದಲ್ಲಿ ವಿಶೇಷವಾದ ಮಹತ್ವ ಹೊಂದಿದೆ. ಸ್ವಾಯತ್ತ ಕಾಲೇಜಿನ ಪ್ರಥಮ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಗೌರವಿಸುವ ಈ ಕಾರ್ಯಕ್ರಮ ಕಾಲೇಜಿನ ನಿರಂತರ ಪ್ರಗತಿ-ಬೆಳವಣಿಗೆ, ಶೈಕ್ಷಣಿಕ ಶ್ರೇಷ್ಠತೆ, ವ್ಯಕ್ತಿತ್ವ ನಿರ್ಮಾಣ ಮತ್ತು ವಿದ್ಯಾರ್ಥಿ ಸಮುದಾಯದ ಸಮಗ್ರ ಅಭಿವೃದ್ಧಿಯ ಬದ್ಧತೆಯನ್ನು ದೃಢಪಡಿಸುವ ಕಾರ್ಯಕ್ರಮವಾಗಿ ಮೂಡಿಬರಲಿದೆ.
ಕಾಲೇಜಿನ ಪ್ರಥಮ ಪದವೀಧರರ ಸಮಾರಂಭವು ಸಂಸ್ಥೆಯ ಶೈಕ್ಷಣಿಕ ಪಯಣದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಸ್ವಾಯತ್ತ ಸಂಸ್ಥೆಯಾಗಿ ಕಾಲೇಜಿನ ನಿರಂತರ ಪ್ರಗತಿ ಮತ್ತು ಬೆಳವಣಿಗೆಯಲ್ಲಿ ಇದು ಒಂದು ಪ್ರಮುಖ ಮೈಲಿಗಲ್ಲಾಗುವುದರ ಜತೆಗೆ, ಶೈಕ್ಷಣಿಕ ಶ್ರೇಷ್ಠತೆ, ವ್ಯಕ್ತಿತ್ವ ನಿರ್ಮಾಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯ ಕುರಿತಾಗಿ ಕಾಲೇಜು ಹೊಂದಿರುವ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುವ ಸಂದರ್ಭವೂ ಆಗಿದೆ. ಕಾಲೇಜು ಆಡಳಿತ ಮಂಡಳಿ, ಶೈಕ್ಷಣಿಕ ನಾಯಕತ್ವ, ಬೋಧಕ ವರ್ಗ, ಸಿಬಂದಿಗಳು ಪೋಷಕರು, ಹಿರಿಯ ವಿದ್ಯಾರ್ಥಿಗಳು ಒಟ್ಟು ಸೇರಿಕೊಂಡು ಶೈಕ್ಷಣಿಕ ಸಾಧಕರನ್ನು ಗೌರವಿಸುವ ಕೆಲಸ ನಡೆಯಲಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಹಾಗೂ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಮಂಗಳೂರು ಇದರ ಅಧ್ಯಕ್ಷರಾದ ಅತಿ ವಂ. ಡಾ. ಪೀಟರ್ ಪಾಲ್ ಸಲ್ದಾನಾ ಅವರು ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಜಂಟಿ ನಿರ್ದೇಶಕರಾದ ಪ್ರೊ. ಕವಿತಾ ಕೆ. ಆರ್, ಮಂಗಳೂರು ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಕಾರ್ಯದರ್ಶಿಗಳಾದ ವಂ.ಡಾ. ಪ್ರವೀಣ್ ಲಿಯೋ ಲಸ್ರಾದೋ ಮತ್ತು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಸಂಚಾಲಕರಾದ ಅತಿ.ವಂ. ಡಾ. ಜೆ. ಬಿ. ಸಲ್ದಾನ್ಹಾ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೊ, ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯರ್, ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ. ವಿನಯಚಂದ್ರ, ಶೈಕ್ಷಣಿಕ ವಿಭಾಗದ ರಿಜಿಸ್ಟ್ರಾರ್ ಡಾ. ನಾರ್ಬರ್ಟ್ ಮಸ್ಕರೇನ್ಹಸ್, ಪುತ್ತೂರು ಮಾಯಿದೆ ದೇವುಸ್ ಚರ್ಚ್ ಪಾಲನಾ ಪರಿಷತ್ತಿನ ಉಪಾಧ್ಯಕ್ಷ ರೋಶನ್ ಲಸ್ರಾದೋ ಮತ್ತು ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಭಾರತಿ ಎಸ್. ರೈ ಅವರು ಉಪಸ್ಥಿತರಿದ್ದರು.