ಸಂತ ಫಿಲೋಮಿನಾ ಕಾಲೇಜಿನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು ಚುನಾವಣಾ ಸಾಕ್ಷರತಾ ಸಂಘ ಹಾಗೂ ಗ್ರಾಹಕ ವೇದಿಕೆಯ ಆಶ್ರಯದಲ್ಲಿ ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸೆಮಿನಾರ್ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ಚುನಾವಣಾ ಆಯೋಗದ ವಿಧಾನಸಭಾ ಕ್ಷೇತ್ರ ಮಟ್ಟದ ತರಬೇತುದಾರ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಹರಿಪ್ರಸಾದ್ ಅವರು ಮತದಾನದ ಹಕ್ಕು, ಮತದಾನದ ಹಕ್ಕನ್ನು ಚಲಾಯಿಸಲು ಅಗತ್ಯವಿರುವ ಅರ್ಹತೆಗಳು ಹಾಗೂ ಮತದಾರರ ಗುರುತಿನ ಚೀಟಿ ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ವಿವರಿಸಿದರು.
ಪುತ್ತೂರು ಸಹಾಯಕ ತಹಶೀಲ್ದಾರ್ ಸುಲೋಚನ ಅವರು ವಿದ್ಯಾರ್ಥಿಗಳಿಗೆ ಮತದಾರರ ಗುರುತಿನ ಚೀಟಿಗಾಗಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ವಿವರಿಸಿದರು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸೇರಿದಂತೆ ನೋಂದಣಿ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿದರು.
ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕಾಲೇಜಿನ ಗ್ರಾಹಕ ವೇದಿಕೆಯ ಸಂಯೋಜಕಿ ಸ್ವಾತಿ ಶೆಟ್ಟಿ ಡಿ. ಸ್ವಾಗತಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕಿ ಧನ್ಯಾ ಪಿ.ಟಿ. ಕಾರ್ಯಕ್ರಮ ನಿರೂಪಿಸಿದರು.
