ಕಸ್ತೂರಿರಂಗನ್ ವರದಿ ವಿರೋಧಿಸಿ ಮಲವಂತಿಗೆಯಲ್ಲಿ ಪ್ರತಿಭಟನೆ
ಉಜಿರೆ: ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ಜಾರಿಯಾಗಬಹುದಾದ ನಿರ್ಬಂಧಗಳನ್ನು ವಿರೋಧಿಸಿ ಮಲವಂತಿಗೆ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶದ ಜನರ ಬದುಕು, ಕೃಷಿ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ತೊಂದರೆಯಾಗುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಹಲವು ವರ್ಷಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಕೃಷಿ, ತೋಟಗಾರಿಕೆ ಸೇರಿದಂತೆ ನಾನಾ ಚಟುವಟಿಕೆಗಳ ಮೂಲಕ ಜೀವನ ನಡೆಸುತ್ತಿದ್ದಾರೆ. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಸ್ಥಳೀಯ ಜನರ ಹಕ್ಕುಗಳಿಗೆ ಧಕ್ಕೆಯಾಗುವಂತಹ ನಿಯಮಗಳನ್ನು ಸರಕಾರ ಜಾರಿಗೊಳಿಸಬಾರದು ಎಂದು ಅವರು ಒತ್ತಾಯಿಸಿದರು.
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಸಂದೇಶ್ ಗೌಡ ನೆಕ್ಕಿಲು, ಜಿಲ್ಲಾ ಸಮಿತಿ ಸದಸ್ಯರಾದ ಜಯಂತ ಹೆಗ್ಡೆ ಹೊಸತೋಟ, ಕೇಶವ ಎಂ.ಕೆ. ಕುದುಮಾನ್, ಗ್ರಾಮ ಸಮಿತಿ ಸದಸ್ಯರಾದ ನಾರಾಯಣ ಗೌಡ ನೆಕ್ಕಿಲೊಟ್ಟು, ಉಮೇಶ್ ಪೂಜಾರಿ ಮಾಲೂರ್, ದಿನೇಶ್ ಗೌಡ, ಪುರಂದರ ಗೌಡ ನಂದಿಕಾಡು, ಮಧುಸೂದನ ಹೆಗ್ಡೆ ಮಲ್ಲ, ಪೂವಣಿ ಗೌಡ ನೆಕ್ಕಿಲು, ರಾಧಾಕೃಷ್ಣ ಗೌಡ ಮಜಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಕಸ್ತೂರಿರಂಗನ್ ವರದಿಯಲ್ಲಿರುವ ಶಿಫಾರಸುಗಳಿಂದ ಸ್ಥಳೀಯ ಕೃಷಿಕರು ಹಾಗೂ ಗ್ರಾಮೀಣ ಜನತೆಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಗಮನ ಸೆಳೆಯಲಾಯಿತು. ಗ್ರಾಮೀಣ ಪ್ರದೇಶಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಏಕಪಕ್ಷೀಯ ನಿರ್ಬಂಧಗಳನ್ನು ಹೇರುವುದು ಸರಿಯಲ್ಲ. ಜನರ ಬದುಕು ಮತ್ತು ಪರಿಸರ ಸಂರಕ್ಷಣೆ ಎರಡನ್ನೂ ಸಮತೋಲನಗೊಳಿಸುವ ರೀತಿಯಲ್ಲಿ ನೀತಿಗಳನ್ನು ರೂಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಳಿಕ ಗ್ರಾಮ ಪಂಚಾಯಿತಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ, ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ ಪ್ರಸ್ತಾವನೆಗಳಲ್ಲಿ ಸ್ಥಳೀಯ ಜನರ ಹಿತಾಸಕ್ತಿಯನ್ನು ಪರಿಗಣಿಸುವಂತೆ ಆಗ್ರಹಿಸಲಾಯಿತು.ಜಯಂತ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ತೀಕ್ಷಿತ್ ಕಲ್ಬೆಟ್ಟು ಸ್ವಾಗತಿಸಿದರು.